ಹಾಸನ: ಜಿಲ್ಲೆಯಲ್ಲಿ ಕಳೆದ ತಿಂಗಳು ಸುರಿದ ಭಾರಿ ಮಳೆಗೆ ₹272 ಕೋಟಿ ನಷ್ಟ ಸಂಭವಿಸಿದೆ ಎಂದು ಉಸ್ತುವಾರಿ ಸಚಿವಕೆ.ಗೋಪಾಲಯ್ಯ ಹೇಳಿದರು.
ಬೆಳೆ, ವಿದ್ಯುತ್ ಕಂಬ, ರಸ್ತೆ, ಕೆರೆ, ಶಾಲಾ, ಅಂಗನವಾಡಿ ಕೇಂದ್ರ ಹಾನಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಮೂಲಕವೇ ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. 40 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೋವಿಡ್ 3ನೇ ಅಲೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳಿಗೆ 200 ಹಾಸಿಗೆ ವಾರ್ಡ್ ಸಿದ್ಧಪಡಿಸಲಾಗಿದೆ. ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕಘಟಕ ಸ್ಥಾಪನೆ ಮಾಡಲಾಗುತ್ತಿದೆ. ನಿತ್ಯ ಜಿಲ್ಲೆಗೆ 25 ಸಾವಿರ ಡೋಸ್ ಕೋವಿಡ್ ಲಸಿಕೆ ಪೂರೈಕೆಆಗುತ್ತಿದ್ದು, ಸಮಸ್ಯೆ ನಿವಾರಣೆ ಆಗಿದೆ ಎಂದರು.
ಎರಡು ದಿನದಲ್ಲಿ ಸಕಲೇಶಪುರಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಹೆದ್ದಾರಿ 75ರ ದೋಣಿಗಾಲ್ ಸಮೀಪಉಂಟಾಗಿರುವ ಭೂ ಕುಸಿತ ದುರಸ್ತಿ ಕಾಮಗಾರಿ ಪರಿಶೀಲಿಸಲಾಗುವುದು. ಮೂರು ದಿನಗಳಲ್ಲಿಬೆಂಗಳೂರು - ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅವಕಾಶನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಮುಂದಿನ ವಾರದಲ್ಲಿ ಕಂದಾಯ, ಅರಣ್ಯ, ಲೋಕೋಪಯೋಗಿಸಚಿವರು ಒಳಗೊಂಡಂತೆ ಜಿಲ್ಲೆಯ ಜನ ಪ್ರತಿನಿಧಿಗಳು, ಕಾಫಿ ಬೆಳೆಗಾರರು, ವಿವಿಧ ಸಂಘ ಸಂಸ್ಥೆಗಳಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು. ಕಾಡಾನೆ, ಮಳೆಹಾನಿ, ರಸ್ತೆ ಇತ್ಯಾದಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕ್ರಮಕೈಗೊಳ್ಳಲಾಗುವುದು ಎಂದರು.
ನಗರದ ಹೊಸ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೇಗ ಹೆಚ್ಚಿಸುವ ಸಲುವಾಗಿ ಎರಡು ಮೂರು ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹಾಸನ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆ ಆಗಿಲ್ಲ. 23 ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಇನ್ನೂ ಒಂದು ವಾರ ಕಾಲಾವಕಾಶ ಇದೆ. ಪಾಸಿಟಿವಿಟಿ ದರ ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್, ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ.ಪರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.