ಹಾಸನ: ಮೂಲಸೌಲಭ್ಯ ಕಲ್ಪಿಸದ ರಾಜ್ಯದ 33 ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮುಚ್ಚಲು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಷನ್ (ಎಐಸಿಟಿಇ) ಶಿಫಾರಸ್ಸು ಮಾಡಿದೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.
ಎಐಸಿಟಿಇ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೂಲಸೌಲಭ್ಯ ಒದಗಿಸದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದೆ. ಮೂಲ ಸೌಲಭ್ಯ ಕಲ್ಪಿಸಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಬೆಳೆಸಲು ಹೊರಟಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ವ್ಯಾಸಂಗ ಮಾಡಿರುವ ಹಾಸನದ ಎಲ್.ವಿ. ಪಾಲಿಟೆಕ್ನಿಕ್ ಸಹ ಮುಚ್ಚುವಂತೆ ಹೇಳಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸರ್ಕಾರಿ ಕಾಲೇಜಿನಲ್ಲಿ ಸೀಟುಗಳು ಭರ್ತಿಯಾಗಿಲ್ಲ ಎಂಬ ಕಾರಣ ನೀಡಿ ಕಳೆದ ವರ್ಷ ಆರಂಭವಾಗಿರುವ ಮೊಸಳೆ ಹೊಸಳ್ಳಿಯಲ್ಲಿರುವ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಕೋರ್ಸ್ಗಳಿಗೆ ಸಂಯೋಜನೆ ನೀಡುವ ಪ್ರಸ್ತಾವವನ್ನು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ತಿರಸ್ಕರಿಸಿದೆ. ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ 173 ವಿದ್ಯಾರ್ಥಿಗಳ ಪೈಕಿ ಬಹುತೇಕರು ವಿದ್ಯಾರ್ಥಿ ವೇತನ ಪಡೆಯುತ್ತಿದ್ದಾರೆ. ಬಡ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಿದೆ. ಬೆಂಗಳೂರು ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 170, ಚಾಮರಾಜನಗರ ಕಾಲೇಜಿನಲ್ಲಿ 96, ಗಂಗಾವತಿ ಕಾಲೇಜಿನಲ್ಲಿ 47 ವಿದ್ಯಾರ್ಥಿಗಳು ಇದ್ದಾರೆ. ಆದರೆ ಈ ಕಾಲೇಜುಗಳಿಗೆ ನಿಯಮ ಏಕೆ ಅನ್ವಯವಾಗುತ್ತಿಲ್ಲ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.