ಹಾಸನ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮಾರ್ಚ್ 27 ರಂದುರಂದು ಬೃಹತ್ ಲೋಕ ಅದಾಲತ್ ನಡೆಸಲಾಗುತ್ತಿದ್ದು, ಬಾಕಿ ಉಳಿದಿರುವ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ರವಿಕಾಂತ್ ಹೇಳಿದರು.
ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲಾ ವಿಧದ ಸಿವಿಲ್ ವ್ಯಾಜ್ಯಗಳು, ಬಗೆಹರಿಸಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್, ಬ್ಯಾಂಕ್ ವಸೂಲಾತಿ, ಮೋಟಾರು ವಾಹನ, ಕೌಟುಂಬಿಕ, ಭೂಸ್ವಾಧೀನ, ಕಂದಾಯ , ಜನನ ಮತ್ತು ಮರಣ ನೋಂದಣಿ, ಜೀವನಾಂಶ ಹಾಗೂ ಇತರೆ ಲಘು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಮತ್ತು ವ್ಯಾಜ್ಯಪೂರ್ವ ಬ್ಯಾಂಕ್ ಸಾಲ ಮರುಪಾವತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಬಂಧಪಟ್ಟ ಕಕ್ಷಿದಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಕೊಳ್ಳಬಹುದು. ರಾಜಿ ಪ್ರಕ್ರಿಯೆಯಿಂದ ಸಮಯ ಮತ್ತು ಹಣ ಉಳಿಸಬಹುದಾಗಿದ್ದು, ಉಭಯ ಪಕ್ಷಗಾರರ ನಡುವಿನ ಬಾಂಧವ್ಯ ಸಹ ವೃದ್ಧಿಸಲಿದೆ. ಆದ್ದರಿಂದ ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಹಾಸನದ ನ್ಯಾಯಾಲಯಗಳಲ್ಲಿ ಎಲ್ಲಾ ವಿಧದ ಒಟ್ಟು 72,881 ಪ್ರಕರಣಗಳು ಬಾಕಿ ಇದ್ದು, 16,738 ಪ್ರಕರಣಗಳು ರಾಜಿ ಪ್ರಕ್ರಿಯೆಗಾಗಿ ಲಭ್ಯವಿದೆ. ರಾಜಿ ಸಂಧಾನಕ್ಕಾಗಿ ಎಲ್ಲಾ ರೀತಿಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣ ಒಳಗೊಂಡಂತೆ 6751 ಪ್ರಕರಣಗಳನ್ನು ಈವರೆಗೆ ಗುರುತಿಸಲಾಗಿದೆ. 10 ರಿಂದ 15 ವರ್ಷದ ಹಳೆ ಪ್ರಕರಣಗಳಿಗೆ ಆದ್ಯತೆ ನೀಡಲಾಗುವುದು. ವಿವಾಹ ವಿಚ್ಛೇದನ, ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಅವಕಾಶ ಇಲ್ಲ ಎಂದರು.
ಮೂರು ತಿಂಗಳಿಗೊಮ್ಮೆ ಅದಾಲತ್ ನಡೆಸಲಾಗುವುದು. ಲಾಕ್ಡೌನ್ ವೇಳೆ ನಡೆದ ಅದಾಲತ್ನಲ್ಲಿ 4,500 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಕೋವಿಡ್ಗೂ ಮುನ್ನ ಅಂದಾಜು 12 ಸಾವಿರ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿತ್ತು ಎಂದು ವಿವರಿಸಿದರು.
ವಕೀಲರ ಸಂಘದ ಜಿಲ್ಲಾಧ್ಯಕ್ಷ ಜೆ.ಪಿ. ಶೇಖರ್ ಮಾತನಾಡಿ, ಅದಾಲತ್ಗೆ ವಕೀಲರ ಸಹಕಾರ ಸಂಪೂರ್ಣ ಇದ್ದು, ಪ್ರಕರಣ ಶೀಘ್ರ ಇತ್ಯರ್ಥವಾಗಬೇಕು ಎನ್ನುವುದು ವಕೀಲರ ಆಶಯವಾಗಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.