ADVERTISEMENT

ಜಿಲ್ಲೆಗೆ ಬರುವ ಸಚಿವರಿಗೆ ಘೇರಾವ್: ರೈತ ಮುಖಂಡರ ಆಗ್ರಹ

ಕೃಷಿ ಕಾಯ್ದೆ ಹಿಂದಪಡೆಯಲು ರೈತ ಮುಖಂಡರ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 2:44 IST
Last Updated 26 ಜನವರಿ 2021, 2:44 IST
ಬೇಲೂರಿನಲ್ಲಿ ರೈತ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ರಸ್ತೆತಡೆ ನಡೆಸಿದರು
ಬೇಲೂರಿನಲ್ಲಿ ರೈತ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ರಸ್ತೆತಡೆ ನಡೆಸಿದರು   

ಬೇಲೂರು: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ಜಿಲ್ಲೆಗೆ ಬರುವ ರಾಜ್ಯ ಹಾಗೂ ಕೇಂದ್ರದ ಎಲ್ಲ ಸಚಿವರಿಗೆ ಘೇರಾವ್ ಹಾಕಲಾಗುವುದು’ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಭೋಗ ಮಲ್ಲೇಶ್ ಎಚ್ಚರಿದರು.

ಇಲ್ಲಿನ ಬಸವೇಶ್ವರ ವೃತ್ತದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.

‘ರೈತರ ಬದುಕಿಗೆ ಮಾರಕವಾಗಿರುವ ಭೂ ಸುಧಾರಣೆ, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದು ರೈತರಿಗೆ ಮರಣ ಶಾಸನ ಬರೆದಿವೆ. ಈ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ನವದೆಹಲಿಯ ಗಡಿಯಲ್ಲಿ ಹಗಲು ಅಹೋರಾತ್ರಿ ಎರಡು ತಿಂಗಳಿಂದ ಪ್ರತಿಭಟಿಸುತ್ತಿದ್ದಾರೆ. ಆದರೆ ಪ್ರಧಾನ ಮಂತ್ರಿ ರೈತರ ಸಮಸ್ಯೆಯನ್ನು ಕೇಳುತ್ತಿಲ್ಲ. ಇಂತಹ ಪ್ರಧಾನಿಯನ್ನು ದೇಶದ ಇತಿಹಾಸದಲ್ಲೇ ಕಂಡಿರಲಿಲ್ಲ’ ಎಂದರು.

ADVERTISEMENT

‘ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಸ್ವಾಮಿಗೌಡ ಮಾತನಾಡಿ, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉದ್ಯಮಿಗಳಿಗೆ ಅನುಕೂಲ ಮಾಡುವ ಏಕೈಕ ಉದ್ದೇಶದಿಂದ ಭೂಸುಧಾರಣೆ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರು ಮೂಲ ವೃತ್ತಿಯೇ ನಾಶವಾಗಲಿದೆ. ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದರು.

ರಸ್ತೆತಡೆಯಿಂದ ಕೆಲ ಸಮಯ ವಾಹನಗಳ ದಟ್ಟಣೆ ಸಂಚಾರ ಅಸ್ತವ್ಯಸ್ತವಾಗಿತ್ತು.

ಪ್ರತಿಭಟನೆಯಲ್ಲಿ ರೈತ ಸಂಘದ ಕಾರ್ಯದರ್ಶಿ ಬಸವರಾಜು, ರಂಗನಾಥ್, ಮಲ್ಲಿಕಾರ್ಜುನ್, ಚಂದ್ರು, ಪ್ರಕಾಶ್, ಹೂವಣ್ಣ, ಪದ್ಮಪ್ರಭು, ಹಾಲಪ್ಪ, ಶಿವಶಂಕರಪ್ಪ, ಸೋಮಣ್ಣ, ರಾಜಪ್ಪ ನಂಜೇಗೌಡ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.