
ಆಲೂರು: ಸಾರ್ವಜನಿಕರು ತಮ್ಮ ಕುಂದುಕೊರತೆಗಳ ನಿವಾರಣೆ ಬಗ್ಗೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ತಿಳಿಸಿದರು.
ಪಟ್ಟಣದಲ್ಲಿ ಜನಸಂಪರ್ಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಲಾಖೆಗಳಲ್ಲಿ ಬಂದಿರುವ ಅರ್ಜಿಗಳನ್ನು ಜನಸಂಪರ್ಕ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಅರ್ಜಿದಾರರ ಸಮ್ಮುಖದಲ್ಲಿ ಪರಿಶೀಲಿಸಿ ಪರಿಹಾರ ಕಲ್ಪಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿ ಪ್ರತಿ ತಿಂಗಳು ಮೊದಲನೇ ಶನಿವಾರ ಜನಸ್ಪಂದನ ಸಭೆ ಮತ್ತು ಮೂರು ಸೋಮವಾರ ರೈತಸಂಪರ್ಕ ಸಭೆ ನಡೆಸಲಾಗುವುದು ಎಂದರು.
ತಾಲ್ಲೂಕಿನಲ್ಲಿ 11 ಕಲ್ಲು ಕ್ವಾರಿಗಳಿವೆ. ಇದರಲ್ಲಿ 1 ಸಹಕಾರ ಸಂಘ, 1 ಗ್ರಾನೈಟ್ ಗಣಿ ಇದೆ. ಕಲ್ಲುಗಣಿಗಳಿಂದ ಅಗತ್ಯ ವಸ್ತುಗಳನ್ನು ಸಾಗಿಸುವ ಸಂದರ್ಭದಲ್ಲಿ ದಿಢೀರ್ ದಾಳಿ ನಡೆಸಿ, ಪ್ರತಿ ಲಾರಿಯಲ್ಲಿ ಟ್ರಿಪ್ಶೀಟ್, ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು.
ಪೊಲೀಸ್ ಠಾಣೆ ಎದುರು ನಿಲ್ಲಿಸಿರುವ 2 ಲಾರಿಗಳಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಲಾರಿಗಳನ್ನು ಸ್ಥಳಾಂತರಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಎಎಸ್ಐ ದೇವರಾಜು ಅವರಿಗೆ ಸೂಚಿಸಿದರು. ಕಲ್ಲು ಸಾಗಿಸುವ ಸಂದರ್ಭದಲ್ಲಿ ರಸ್ತೆಗಳು ದುರಸ್ತಿಗೀಡಾದರೆ ಸ್ಥಳೀಯ ಪಂಚಾಯಿತಿಯಿಂದ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲು ಅವಕಾಶವಿದೆ ಎಂದರು. ತಾಲ್ಲೂಕು ಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.