ADVERTISEMENT

ವಿದ್ಯಾರ್ಥಿನಿಲಯ ಪ್ರಾರಂಭಿಸಲು ಒತ್ತಾಯ

ಎಬಿವಿಪಿ ನೇತೃತ್ವದಲ್ಲಿ ಡಿ.ಸಿ ಕಚೇರಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 16:59 IST
Last Updated 16 ಸೆಪ್ಟೆಂಬರ್ 2021, 16:59 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಹಾಸನ: ಗ್ರಾಮೀಣ ಭಾಗಕ್ಕೆ ಬಸ್‌ ಸೌಲಭ್ಯ ಒದಗಿಸಬೇಕು ಹಾಗೂ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಎನ್‌.ಆರ್‌. ವೃತ್ತದ ಮೂಲಕ ಮೆರವಣಿಗೆಯಲ್ಲಿ ಬಂದು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ಸ್ಥಗಿತಗೊಂಡಿದ್ದ ಶಾಲಾ, ಕಾಲೇಜು ಪುನರಾರಂಭಗೊಂಡಿದ್ದರೂ ಗ್ರಾಮೀಣ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆ ಸರಿಯಿಲ್ಲ. ಇದರಿಂದ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಕೂಡಲೇ ಎಲ್ಲ ಬಸ್‍ಗಳ ಸೇವೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಡಿಪ್ಲೊಮಾ, ಎಂಜಿನಿಯರಿಂಗ್, ಸ್ನಾತಕ - ಸ್ನಾತಕೋತ್ತರ ಮತ್ತು ಪಿಎಚ್‍.ಡಿ ಮಾಡುತ್ತಿರುವ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಿಷ್ಯವೇತನ ನೀಡದೆ ಇರುವುದರಿಂದ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನ ತಕ್ಷಣ ಬಿಡುಗಡೆಗೊಳಿಸಬೇಕು. ವಿದ್ಯಾರ್ಥಿಗಳ ಅಧ್ಯಯನ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಎಬಿವಿಪಿ ರಾಜ್ಯ ಘಟಕದ ಸಹ ಕಾರ್ಯದರ್ಶಿ ಸಾಯಿ ಐಶ್ವರ್ಯ ಶೆಟ್ಟಿ ಮಾತನಾಡಿ, ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‌ಗಳನ್ನೇ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರಇಲಾಖೆಗಳ ವ್ಯಾಪ್ತಿಗೆ ಬರುವ ವಸತಿ ನಿಲಯಗಳ ಸಂಖ್ಯೆ ಪ್ರವೇಶ ಬಯಸಿ ಸಾಕಷ್ಟು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತದೃಷ್ಟಿಯಲ್ಲಿ ಸರ್ಕಾರ ತಕ್ಷಣಕ್ಕೆ ವಸತಿ ನಿಲಯಗಳ ಸಮಸ್ಯೆ ಬಗೆಹರಿಸಬೇಕು ಎಂದರು.

ಸರ್ಕಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಪ್ರಸಕ್ತ ವರ್ಷದ
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್‍ಗಳನ್ನು ತೆರೆದು ಮೂಲ ಸೌಕರ್ಯ ಒದಗಿಸಬೇಕು
ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲಿಸಿದರು.

ಪ್ರತಿಭಟನೆಯಲ್ಲಿ ಎಬಿವಿಪಿ ಮುಖಂಡ ಬೊಮ್ಮಣ್ಣ, ಸಂಚಾಲಕರಾದ ಅರುಣ್, ಸಂಪತ್, ಚೈತ್ರಾ,
ವೀರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.