ADVERTISEMENT

ಚುನಾವಣಾ ವೆಚ್ಚದ ಮಾಹಿತಿ ಸಲ್ಲಿಸುವುದು ಕಡ್ಡಾಯ: ಎಂ.ಎಸ್. ಅರ್ಚನಾ

ಮಾದರಿ ನೀತಿ ಸಂಹಿತೆ ಅನುಸರಿಸಲು ರಾಜಕೀಯ ಪಕ್ಷಗಳಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 5:24 IST
Last Updated 9 ಮಾರ್ಚ್ 2023, 5:24 IST
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಯಿತು.
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಭೆ ನಡೆಯಿತು.   

ಹಾಸನ: ವಿಧಾನಸಭಾ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಮತ್ತು ಇತರೆ ಚುನಾವಣಾ ವಿಷಯಗಳ ಕುರಿತಂತೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅಧ್ಯಕ್ಷತೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಂಗಳವಾರ ಸಭೆ ನಡೆಯಿತು.

ವಿಧಾನಸಭಾ ಚುನಾವಣೆಗೆ ಶೀಘ್ರದಲ್ಲಿಯೇ ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆ ಆಗಲಿದ್ದು, ಚುನಾವಣಾ ಪೂರ್ವದಲ್ಲಿ ವಿವಿಧ ರಾಜಕೀಯ ಪಕ್ಷಗಳು ಸಾರ್ವಜನಿಕ ಸಭೆ, ಸಮಾರಂಭ ನಡೆಯುವ ಪೂರ್ವದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿ ಪೂರ್ವಾನುಮತಿ ಪಡೆಯದೇ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳಿದ್ದಲ್ಲಿ ಅವುಗಳನ್ನು ತೆರವುಗೊಳಿಸಬೇಕು. ಸರ್ಕಾರಿ ಕಚೇರಿಗಳ ಕಟ್ಟಡ ಮತ್ತು ಕಾಂಪೌಂಡ್‍ಗಳ ಮೇಲೆ ಅಳವಡಿಸಿರುವ ಪಕ್ಷಗಳ ಪರವಾದ ಪ್ರಚಾರದ ಜಾಹೀರಾತುಗಳನ್ನು ಕೂಡಲೇ ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಚುನಾವಣಾ ವೆಚ್ಚದ ವಿವರಗಳನ್ನು ತಲುಪಿಸುವಂತೆ ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿಯ ಮುಖ್ಯ ಲೆಕ್ಕಾಧಿಕಾರಿ, ಚುನಾವಣಾ ವೆಚ್ಚಗಳ ಜಿಲ್ಲಾ ನೋಡಲ್ ಅಧಿಕಾರಿಯವರು ತಫಸುಲ್ ಹುಸೇನ್ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದ ಅನುಸಾರ ಕುರಿತು ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳು ವೆಚ್ಚಗಳನ್ನು ನಿರ್ವಹಿಸಲು ಅಗತ್ಯವಾದ ತರಬೇತಿ ಹಾಗೂ ವಿವರಗಳನ್ನು ನೀಡಿದರು

ಕಾನೂನಾತ್ಮಕ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ವೆಚ್ಚಗಳ ವಿವರಗಳನ್ನು ನಿಗದಿತ ಸಮಯದ ಒಳಗಾಗಿ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಈ ಬಗ್ಗೆ ಮುದ್ರಿತ ನಿರ್ದೇಶನಗಳನ್ನು ಒಳಗೊಂಡ ಪುಸ್ತಿಕೆಗಳು ಆಯೋಗದಿಂದ ಬರಲಿದ್ದು, ಬಂದ ಕೂಡಲೇ ಒದಗಿಸಲಾಗುವುದು ಎಂದು ತಿಳಿಸಿದರು.

ಕಾಯ್ದೆಯಲ್ಲಿನ ಅಂಶಗಳ ಉಲ್ಲಂಘನೆ ಮಾಡಿದಲ್ಲಿ ವಿಧಿಸಲಾಗುವ ದಂಡನೆಗಳ ಕುರಿತಾಗಿ ವಿವರಣೆ ನೀಡಲಾಯಿತು. ಶಾಂತಿಯುತ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ನಡೆಸಲು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಸಭೆಯಲ್ಲಿ ಹಾಜರಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಲಾಯಿತು. ಸುವಿಧ ಹಾಗೂ ವಿಜಿಲ್ ಆ್ಯಪ್‍ಗಳ ಬಗ್ಗೆ ವಿವರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್ ಸಹ ಹಲವು ಸಲಹೆ ಸೂಚನೆ ನೀಡಿದರು.

ವಿದ್ಯುನ್ಮಾನ ಮತಯಂತ್ರಗಳ ಕಾರ್ಯನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ತಹಶೀಲ್ದಾರ್ ಸಂತೋಷ್ ನೀಡಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.