ADVERTISEMENT

ಹಾಸನ: ಬಸ್‌ಪಾಸ್ ಅವಧಿ ವಿಸ್ತರಿಸಲು ಆಗ್ರಹ

ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 3:47 IST
Last Updated 5 ಜುಲೈ 2022, 3:47 IST
ಹಾಸನದಲ್ಲಿ ಸೋಮವಾರ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ಹಾಸನದಲ್ಲಿ ಸೋಮವಾರ ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಹಾಸನ: ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ವೈದ್ಯಕೀಯ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವವರೆಗೂ ವಿಸ್ತರಿಸುವಂತೆ ಆಗ್ರಹಿಸಿ ಸೋಮವಾರ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಸಂಚಾಲಕ ಸುಭಾಷ್, ರಾಜ್ಯದ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಬಸ್‌ಪಾಸ್ ಅನ್ನು ಕಳೆದ ವರ್ಷ ಸೆಪ್ಟೆಂಬರ್‌ವರೆಗೆ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್‌ನಲ್ಲಿ ಆರಂಭವಾಗಿತ್ತು. ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಡಿಸೆಂಬರ್‌ವರೆಗೆ ನೀಡಲಾಗಿತ್ತು. ವಿದ್ಯಾರ್ಥಿ ಬಸ್‌ಪಾಸ್‌ಗೆ ಅವರ ಶೈಕ್ಷಣಿಕ ವರ್ಷದ ಕೊನೆಯವರೆಗೂ ಮಾನ್ಯತೆ ಇರುತ್ತದೆ. ಇದು ಇಷ್ಟು ವರ್ಷಗಳವರೆಗೂ ನಡೆದುಕೊಂಡು ಬಂದಿರುವ ಪ್ರಕ್ರಿಯೆ. ನವೆಂಬರ್‌ನಲ್ಲಿ ತರಗತಿ ಆರಂಭದ ನಂತರ ಪಾಸ್ ಪಡೆದ ವಿದ್ಯಾರ್ಥಿಗಳು ಆಗಸ್ಟ್‌ವರೆಗೂ, ಡಿಸೆಂಬರ್‌ನಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳು ಸೆಪ್ಟಂಬರ್‌ವರೆಗೂ ಉಚಿತವಾಗಿ ಓಡಾಡಬಹುದು ಎಂದು ತಿಳಿಸಿದರು.

ಈಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಏಕಾಏಕಿ ವಿದ್ಯಾರ್ಥಿ ಬಸ್ ಪಾಸ್‌ನ ಅವಧಿಯು ಜೂನ್ ತಿಂಗಳಿಗೆ ಕೊನೆಗೊಳ್ಳಲಿರುವುದರಿಂದ ಮುಂದಿನ ತಿಂಗಳಿನಿಂದ ಹಣ ಪಾವತಿಸಿ ಓಡಾಡಬೇಕು ಎಂದು ಹೇಳಿದೆ. ನಿಗಮದ ಈ ನಿರ್ಧಾರವನ್ನು ಎಐಡಿಎಸ್‌ಒ ಜಿಲ್ಲಾ ಸಮಿತಿ ಖಂಡಿಸುತ್ತದೆ ಎಂದರು.

ADVERTISEMENT

ಹಲವು ವರ್ಷಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್ ಅನ್ನು ಪಡೆದುಕೊಂಡಿದ್ದಾರೆ. ವಾಸ್ತವವಾಗಿ, ನಮ್ಮ ಹೋರಾಟ ಉಚಿತ ಪಾಸ್ ನೀಡಬೇಕು ಎಂಬುದಾಗಿದೆ. ಹೀಗಿರುವಾಗ, ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಮಾನ್ಯತೆ ರದ್ದಾಗಿದೆ. ದುಡ್ಡು ಕೊಟ್ಟು ಓಡಾಡಬೇಕು ಎಂಬುದು ವಿದ್ಯಾರ್ಥಿ ವಿರೋಧಿ ನಿರ್ಧಾರ ಎಂದು‌ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಯು ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಆಗಸ್ಟ್‌ವರೆಗೆ ವಿಸ್ತರಣೆ ಮಾಡಿದೆ. ಇದನ್ನೇ ಇತರೆ ಸಾರಿಗೆ ಸಂಸ್ಥೆಗಳು ಅನುಸರಿಸಬೇಕು. ರಾಜ್ಯ ಸಾರಿಗೆ ನಿಗಮವೂ ವಿದ್ಯಾರ್ಥಿಗಳಿಗೆ ಪ್ರಯಾಣ ಮಾಡಲು ಅನುಕೂಲವಾಗುವಂತೆ ಪಾಸ್ ಅವಧಿ ವಿಸ್ತರಣೆ ಮಾಡಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‌ ಜಿಲ್ಲಾ ಸಹ ಸಂಚಾಲಕಿ ಚೈತ್ರಾ ಪದಾಧಿಕಾರಿಗಳಾದ ಗಾಯತ್ರಿ, ಸುಷ್ಮಾ, ವಿದ್ಯಾರ್ಥಿಗಳಾದ ಅಂಜಲಿ, ಮದನ್, ಸಂಜಯ್, ಅಮರ್ಜಿತ್, ಕಿರಣ್, ಗುರುದೇವ, ಮನು, ಪ್ರೀತಮ್, ದರ್ಶನ್, ಅಭಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.