ADVERTISEMENT

ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪ್ರಾರಂಭ: ಸಚಿವ ಕೆ.ಗೋಪಾಲಯ್ಯ

ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 12:34 IST
Last Updated 15 ಆಗಸ್ಟ್ 2021, 12:34 IST
ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಎಸ್ಸೆಸ್ಸೆಲ್ಸಿಯಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಲ್ಲಿ ಸಚಿವ ಕೆ.ಗೋಪಾಲಯ್ಯ ಅವರು ಎಸ್ಸೆಸ್ಸೆಲ್ಸಿಯಲ್ಲಿ 125ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.   

ಹಾಸನ: ದಶಕಗಳಿಂದ ನನೆಗುದಿಗೆ ಬಿದ್ದಿದ್ದ ಹಾಸನ ವಿಮಾನ ನಿಲ್ದಾಣ ಕಾಮಗಾರಿಗೆ ಅನುಮೋದನೆ ದೊರೆತಿದ್ದು, ₹175 ಕೋಟಿ ವೆಚ್ಚದ ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಭಾನುವಾರ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ
ದಿನದ ಅಮೃತ ಮಹೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದ ಅವರು, ಖೇಲೋ ಇಂಡಿಯಾ ಯೋಜನೆಯಡಿ ₹8.5ಕೋಟಿ ವೆಚ್ಚದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಿಂಥೆಟಿಕ್ ಟ್ರ್ಯಾಕ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ ಎಂದರು.

ಎತ್ತಿನ ಹೊಳೆ ಯೋಜನೆ ಕಾಮಗಾರಿಗೆ ಎರಡು ವರ್ಷಗಳಲ್ಲಿ ₹1350 ಕೋಟಿಗೂ ಅಧಿಕ ಹಣ ಒದಗಿಸಲಾಗಿದೆ. ಈ ಯೋಜನೆಗಾಗಿ ಜಮೀನು ನೇರ ಖರೀದಿಗೆ ₹180 ಕೋಟಿ ಹಾಗೂ ಭೂಸ್ವಾಧೀನಕ್ಕೆ ₹190 ಕೋಟಿ ಹಣ ಬಿಡುಗಡೆ ಮಾಡಿದ್ದು, ಭೂ ಮಾಲೀಕರಿಗೆ ಬಿಡುಗಡೆ ನೀಡಲಾಗುವುದುಎಂದು ತಿಳಿಸಿದರು.

ADVERTISEMENT

ವಿಶೇಷ ಅನುದಾನ ಹಾಗೂ ಮಳೆ ಹಾನಿ ಯೋಜನೆಯಡಿ ₹15 ಕೋಟಿ ವೆಚ್ಚದಲ್ಲಿ 206 ಕಿ.ಮೀ. ರಸ್ತೆಕಾಮಗಾರಿ ಹಾಗೂ ನಿರ್ವಹಣೆಗೆ ಕ್ರಮಕೈಗೊಳ್ಳಲಾಗಿದೆ. ಉದ್ಯೋಗ ಖಾತರಿ ಯೋಜನೆಯಡಿ ಎರಡುವರ್ಷಗಳಲ್ಲಿ 95 ಲಕ್ಷ ಮಾನವ ದಿನಗಳನ್ನು ಸೃಜಿಸಿ ₹411 ಕೋಟಿ ವೆಚ್ಚ ಭರಿಸಲಾಗಿದೆ ಎಂದುನುಡಿದರು.

ನಗರ ಸ್ಥಳೀಯ ಸಂಸ್ಥೆಗಳಿಗೆ ನಗರೋತ್ಥಾನ ಯೋಜನೆಯಡಿ ₹9.40 ಕೋಟಿ ಹಂಚಿಕೆಯಾಗಿದ್ದು, 92ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಅನುಮೋದನೆಯಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರಕೆರೆ ಜೇನುಕಲ್ ನಗರದಲ್ಲಿ ₹65 ಕೋಟಿ ವೆಚ್ಚದಲ್ಲಿ 1310 ಮನೆಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 439 ಕಲಾವಿದರಿಗೆ ಆರ್ಥಿಕ ಸಹಾಯ ನೀಡಲಾಗಿದೆ ಎಂದು ವಿವರಿಸಿದರು.

ತೋಟಗಾರಿಕಾ ವಿಸ್ತರಣಾ ಕೇಂದ್ರ ಸೋಮನಹಳ್ಳಿ ಕಾವಲ್ ಆಲೂಗೆಡ್ಡೆ ಸಂಶೋಧನಾ ಕೇಂದ್ರದ ಮೂಲಕ ಸ್ಥಳೀಯವಾಗಿಯೇ ಅಂಗಾಂಶ ಕೃಷಿ ತಂತ್ರಜ್ಞಾನದ ಮೂಲಕ ಆಲೂಗೆಡ್ಡೆ ಸಸಿ ಉತ್ಪಾದಿಸಿ ವಿತರಿಸಿದ್ದು, ರೈತರಿಗೆ ಇಳುವರಿ ಹೆಚ್ಚಳಕ್ಕೆ ಅವಕಾಶವಾಗಿದೆ. ಮುಂದಿನ ಬಿತ್ತನೆ ಬೀಜಕ್ಕೆ ಸ್ವಾವಲಂಬನೆಯ ಹಾದಿ ದೊರೆತಂತಾಗಿದೆ ಎಂದರು.

ಕೋವಿಡ್ ಎರಡು ಅಲೆಗಳಲ್ಲಿ ಲಾಕ್‍ಡೌನ್ ಸಮಸ್ಯೆ ಎದುರಾಗಿ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರು, ಆಟೋ, ಟ್ಯಾಕ್ಸಿ ಚಾಲಕರು, ಕೃಷಿಕರು, ಕಲಾವಿದರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಆರ್ಥಿಕ ಪ್ಯಾಕೇಜ್ ಮೂಲಕ ತಾತ್ಕಾಲಿಕ ನೆರವು ಒದಗಿಸಲಾಗಿದೆ. ಅಲ್ಲದೇ, ಕೋವಿಡ್‍ನಿಂದ ಮೃತಪಟ್ಟಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬ ಸದಸ್ಯರಿಗೆ, ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಶೀಘ್ರದಲ್ಲೇ ಮೃತ ಕುಟುಂಬದವರ ಖಾತೆಗೆ ವರ್ಗಾವಣೆಯಾಗಲಿದೆ ಎಂದರು.

ಶಾಸಕ ಪ್ರೀತಂ ಗೌಡ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್‌, ಪೊಲೀಸ್‌ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎನ್.ನಂದಿನಿ, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.