ಹಾಸನ: ವಿವಿಧ ಇಲಾಖೆಗಳ ಗುಮಾಸ್ತರ ಹುದ್ದೆಗೆ ಲಿಖಿತ ಪರೀಕ್ಷೆಗಳು ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಕಟ್ಟು ನಿಟ್ಟಿನ ಕ್ರಮ ಅನುಸರಿಸಲು ಜಿಲ್ಲಾಧಿಕಾರಿ ಅಕ್ರಂ ಪಾಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂನ್ 8, 9 ಮತ್ತು 16 ರಂದು ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿರುವ ಹಿನ್ನಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳ ಕೊರತೆ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾರ್ಥಿಗಳು ಕೊಠಡಿಯೊಳಗೆ ಮೊಬೈಲ್ ಫೋನ್ ತರಲು ಅವಕಾಶವಿಲ್ಲ. ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮಾಡಬೇಕು. ಭದ್ರತೆಗೆ ಅವಶ್ಯವಿರುವ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು ಎಂದು ತಿಳಿಸಿದರು.
ಕೇಂದ್ರಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು, ಮೇಲ್ವಿಚಾರಕರು ಗೊಂದಲಗಳಿಗೆ ಒಳಗಾಗಬಾರದು. ಸಮಸ್ಯೆಗಳು ಎದುರಾದಲ್ಲಿ ತಕ್ಷಣ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ರೀತಿಯ ಕೆಟ್ಟ ಹೆಸರು ಬಾರದಂತೆ ಎಚ್ಚರ ವಹಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.