ಬೇಲೂರು: ಬೇಲೂರು ಕ್ಷೇತ್ರದ ವಿಷಯದಲ್ಲಿ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಸ್.ಭೋಜೇಗೌಡ ಆರೋಪಿಸಿದರು.
ಇಲ್ಲಿನ ಯಗಚಿ ಜಲಾಶಯದ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ‘ಉಸ್ತುವಾರಿ ಸಚಿವರು ಎಂಟು ತಾಲ್ಲೂಕುಗಳಿಗೂ ಒಳಪಡುತ್ತಾರೆ. ಆದರೆ ಬೇಲೂರನ್ನು ನಿರ್ಲಕ್ಷಿಸುತ್ತಿರುವುದು ಏಕೆ’ ಎಂದು ಪ್ರಶ್ನಿಸಿದರು.
‘ಹಾಸನಾಂಬ ಉತ್ಸವಕ್ಕೆ ಗಮನ ನೀಡುತ್ತೀರಾ ಆದರೆ ಬೇಲೂರಿಗೆ ಬಂದು ಬಾಗಿನ ಅರ್ಪಿಸಲು ಮುಂದಾಗುತ್ತಿಲ್ಲ, ರಸ್ತೆ ವಿಸ್ತರಣೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿದ್ದರೂ ಗಮನ ಹರಿಸುತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣಗೌಡ ಬಣ) ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ್ ಮಾತನಾಡಿ, ‘ಯಗಚಿ ಜಲಾಶಯ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಶೌಚಾಲಯಗಳನ್ನು ನಿರ್ಮಿಸಿಲ್ಲ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಶಾಸಕರು ಈ ಬಗ್ಗೆ ಗಮನಹರಿಸಿ ಮೂಲಸೌಲಭ್ಯ ಕಲ್ಪಿಸಲು ಮಂದಾಗಬೇಕು, ಇಲ್ಲವಾದಲ್ಲಿ ಸಂಘಟನೆಯಿಂದ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.