ಅರಕಲಗೂಡು: ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ಫೆ. 12ರಂದು ತಾಲ್ಲೂಕಿನ ಕೊಣನೂರಿನಲ್ಲಿ ಆಯೋಜಿಸಲು ಪಟ್ಟಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಎ.ಮಂಜು ಮಾತನಾಡಿ, ‘ಆಳ್ವಾಸ್ ಶಿಕ್ಷಣ ಸಂಸ್ಥೆ ಸಾಂಸ್ಕೃತಿಕ ವೈಭವವನ್ನು ತಾಲ್ಲೂಕಿನಲ್ಲಿ ನಡೆಸಲು ಮುಂದೆ ಬಂದಿದೆ. ದೇಶದ ವಿವಿಧ ರಾಜ್ಯಗಳ ಸಾಂಸ್ಕೃತಿಕ ವೈಭವವನ್ನು ಮೇಳೈಸುವ ಈ ಕಾರ್ಯಕ್ರಮ ನಮ್ಮ ಯುವಜನರಿಗೆ ಪ್ರೇರಣೆ ನೀಡಲಿದೆ. ಈ ಹಿಂದೆ ತಾವು ಸಚಿವರಾಗಿದ್ದ ವೇಳೆ ಪಟ್ಟಣದ ಕ್ರೀಡಾಂಗಣದಲ್ಲಿ ನಡೆಸಿದ್ದ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿತ್ತು. ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೀಕ್ಷಿಸಬೇಕು. ಕಾರ್ಯಕ್ರಮದ ಯಶಸ್ಸಿಗೆ ಮುಖಂಡರು, ಸಂಘ, ಸಂಸ್ಥೆಗಳು ಹೆಚ್ಚಿನ ಆಸಕ್ತಿ ವಹಿಸಿ ಸಹಕರಿಸುವಂತೆ’ ಮನವಿ ಮಾಡಿದರು.
ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಕೆ.ಸತೀಶ್, ತಾಪಂ ಮಾಜಿ ಅಧ್ಯಕ್ಷ ನರಸೇಗೌಡ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪುಟ್ಟರಾಜ್, ತಾಲ್ಲೂಕು ಕೃಷಿಕ ಸಮಾಜದ ಕಾರ್ಯದರ್ಶಿ ಎಚ್.ಎಸ್. ರೇವಣ್ಣ, ಪಪಂ ಮಾಜಿ ಅಧ್ಯಕ್ಷ ಮಂಜು ಶೆಟ್ಟಿಗೌಡ, ಮುಖಂಡರಾದ ಎಂ.ಜಿ. ರಾಜೇಗೌಡ,ಚೌಡೇಗೌಡ, ಕೃಷ್ಣೇಗೌಡ, ಧರ್ಮ, ಎಂ.ಆರ್. ಮಂಜುನಾಥ್, ಮೂಡ್ಲಿಗೌಡ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.