ಅರಸೀಕೆರೆ: ‘ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರು, ಮಧ್ಯಮ ವರ್ಗದವರಿಗೆ ನೆರವು ನೀಡಿದ್ದು, ಜೀವನ ಮಟ್ಟ ಸುಧಾರಿಸಿದೆ’ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಥಾನ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ್ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಟೀಕಾಕಾರರ ಬಾಯಿ ಮುಚ್ಚಿಸಿದ್ದು, ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ. ಯುವನಿಧಿ ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ಕೊರತೆ ಇದ್ದು, ಇದರ ಪ್ರಚಾರಪಡಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯ ಹಣವು ಇದುವರೆಗೆ ₹321 ಕೋಟಿ ಸಂದಾಯವಾಗಿದೆ. ಶೇಕಡಾ 99.8 ಸಾಧನೆಯಾಗಿದ್ದು, 112 ಮಂದಿಗೆ ಬಾಕಿ ಇದೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು.
ಮುಂದಿನ ಸಭೆಯೊಳಗೆ ಮತ್ತಷ್ಟು ಫಲಾನುಭವಿಗಳಿಗೆ ಯೋಜನೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಗ್ರಾಮೀಣ ಭಾಗಗಳಲ್ಲಿ ಎಲ್ಲರಿಗೂ ಸೂಕ್ತ ರೀತಿಯಲ್ಲಿ ತೂಕದಲ್ಲಿ ವ್ಯತ್ಯಾಸ ಆಗದಂತೆ ಪಡಿತರ ವಿತರಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ವೈದ್ಯ ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಉಪಾಧ್ಯಕ್ಷ ಜವನಪ್ಪ, ತಾಲ್ಲೂಕು ಪಂಚಾಯಿತಿ ಇಒ ಸತೀಶ್, ಸದಸ್ಯರಾದ ಕಮಲಮ್ಮ, ಪ್ರದೀಪ್, ಸಿದ್ದೇಶ್ ಜಾಜೂರು, ಬಸವರಾಜು, ಲೋಕೇಶ್, ಕೃಷ್ಣೇಗೌಡ, ಪರಮೇಶ್, ಚಾನ್ಪಾಷ್, ವಿರೂಪಾಕ್ಷ, ಕೆ.ಆರ್.ಸತೀಶ್, ಶಿವಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.