ಹಾಸನ: ‘ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಕ್ರಮ ಆಗಲಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಭೌತವಿಜ್ಞಾನ ವಿಷಯದಲ್ಲಿ ದೂರು ಬಂದಿತ್ತು. ತಕ್ಷಣ ಕ್ರಮ ವಹಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ’ ಎಂದರು.
‘ಭ್ರಷ್ಟಾಚಾರ ಸಂಪೂರ್ಣ ನಿರ್ಮೂಲನೆಗೆ ಎಲ್ಲಾ ಪ್ರಯತ್ನ ಆಗುತ್ತಿದೆ. ಈ ದಿಕ್ಕಿನಲ್ಲಿ ಮುಖ್ಯಮಂತ್ರಿ ಗುತ್ತಿಗೆದಾರರನ್ನು ಕರೆಸಿ ನೇರವಾಗಿ ಮಾತಾಡಿದ್ದಾರೆ’ ಎಂದು ನುಡಿದರು.
‘ಗೃಹ ಸಚಿವರು ಪರೀಕ್ಷಾ ಅಕ್ರಮದ ಬಗ್ಗೆ ತಮಗೆ ಮಾಹಿತಿ ಬರುತ್ತಿದ್ದಂತೆಯೇ ತನಿಖೆಗೆ ಆದೇಶ ಮಾಡಿದ್ದಾರೆ. ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಸಾಮಾನ್ಯ ವ್ಯಕ್ತಿ ದೂರು ಕೊಟ್ಟರೂಕ್ರಮ ವಹಿಸಿದ್ದಾರೆ. ಸರ್ಕಾರಿ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೆ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಉಪ್ಪು ತಿಂದವನು ನೀರು ಕುಡಿಯಲೇ ಬೇಕು. ಕಾನೂನು ಪ್ರಕಾರ ಅಧಿಕಾರ ದುರ್ಬಳಕೆ ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಆಗುತ್ತೆ’ ಎಂದು ಸ್ಪಷ್ಟಪಡಿಸಿದರು.
ಪಿಎಸ್ಐ ನೇಮಕಾತಿ ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕಪ್ರಿಯಾಂಕ ಖರ್ಗೆಗೆ ಸಿಐಡಿ ನೋಟಿಸ್ ನೀಡಿರುವ ವಿಚಾರವಾಗಿ ಮಾತನಾಡಿದ ಅವರು, ‘ಏನಾಗಿದೆ ಎಂದು ಅವರೇ ಬಂದು ಹೇಳಬೇಕು ಅಲ್ಲವೇ. ನೋಟಿಸ್ ಕೊಟ್ಟಿರುವುದು ಕ್ರೈಂ ಮಾಡಿದ್ದೀಯಾ ಅಂತ ಅಲ್ಲ. ಅವರ ಬಳಿ ಇರುವ ಮಾಹಿತಿ ಕೊಡುವಂತೆ. ಗಾಳಿಯಲ್ಲಿ ಗುಂಡು ಹೊಡೆದರೆ ಆಗುತ್ತಾ. ಧೈರ್ಯವಾಗಿ ಬಂದು ಅವರ ಬಳಿ ಇರುವ ಸಾಕ್ಷಿ ಹೇಳಬೇಕು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.