ಹಾಸನ: ಆದಿಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮೀಜಿಯ 9ನೇ ವರ್ಷದ ಪುಣ್ಯಾರಾಧನಾ ಕಾರ್ಯಕ್ರಮದ ಅಂಗವಾಗಿ ಗುರುವಾರ ಹೇಮಾವತಿ ಪ್ರತಿಮೆ ಬಳಿ ಭಕ್ತರು ಪೂಜಾ, ಕೈಂಕರ್ಯ ನೇರವೇರಿಸಿದರು. ಅನ್ನದಾಸೋಹ ಏರ್ಪಡಿಸಲಾಗಿತ್ತು.
ಟ್ಯಾಕ್ಸಿ ನಿಲ್ದಾಣದ ಬಳಿ ಬಾಲಗಂಗಾಧರನಾಥ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಮಠದ ಪುರೋಹಿತರು ಪೂಜಾ ವಿಧಿ ವಿಧಾನ ನಡೆಸಿಕೊಟ್ಟರು.
ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್ ಮುದ್ದೇಗೌಡ ಮಾತನಾಡಿ, ‘ಬಾಲಗಂಗಾಧರನಾಥ ಸ್ವಾಮೀಜಿ ಈ ನಾಡಿಗೆ ಕೊಟ್ಟಿರುವ ಕೊಡುಗೆ ಅಪಾರ. ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ಸಮಾಜ ನಡೆಯಬೇಕಿದೆ’ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಎಲ್ ಮಲ್ಲೇಶಗೌಡ ಮಾತನಾಡಿ, ‘ಬಾಲಗಂಗಾಧರ ನಾಥ ಸ್ವಾಮೀಜಿ ಬಹುವಿಧ ದಾಸೋಹದ ಮೂಲಕ ನಾಡಿಗೆ ಬಹುದೊಡ್ಡ ಕೊಡುಗೆ ನೀಡಿದ್ದರು. ಜಾತ್ಯತೀತವಾದ ನಿಲುವಿನೊಂದಿಗೆ ಮನುಕುಲದ ಅಭ್ಯುದಯಕ್ಕಾಗಿ ದುಡಿದ ಶ್ರೀಗಳು ಎಂದೆಂದಿಗೂ ಜನ ಮಾನಸದಲ್ಲಿ ನೆಲೆ ನಿಲ್ಲುತ್ತಾರೆ’ ಎಂದು ತಿಳಿಸಿದರು.
ಜೆಡಿಎಸ್ ಮುಖಂಡ ಎಚ್.ಪಿ. ಸ್ವರೂಪ್ ಮಾತನಾಡಿ, ‘ಆದಿಚುಂಚನಗಿರಿ ಕ್ಷೇತ್ರ ಬಡವರಿಗಾಗಿ ಸದಾ ದುಡಿದಿದೆ. ಬಾಲಗಂಗಾಧರ ನಾಥ ಸ್ವಾಮೀಜಿ ಅವರು ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯಿಂದ ಸಮಾಜಕ್ಕೆ ಸಾಕಷ್ಟು ಒಳಿತಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಎಸ್.ರಘುಗೌಡ, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್ ಅನಿಲ್ ಕುಮಾರ್, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜ್, ಜೆಡಿಎಸ್ ಜಿಲ್ಲಾ ವಕ್ತಾರ ಹೊಂಗೆರೆ ರಘು, ನಗರಸಭೆ ಸದಸ್ಯರಾದ ವಾಸುದೇವ್, ಚಂದ್ರೇಗೌಡ, ಪ್ರಶಾಂತ್ ನಾಗರಾಜ್, ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ ಹಾಗೂ ಬೂವನಹಳ್ಳಿ ಹರೀಶ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.