
ಬೇಲೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಡೆ ಅತ್ಯಂತ ಮುಖ್ಯ ಎಂದು ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಹೇಳಿದರು.
ಇಲ್ಲಿನ ಬಿಜಿಎಸ್ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ, ಗುರುವಂದನೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ತಂದೆ, ತಾಯಿ ಜನ್ಮ ನೀಡುತ್ತಾರೆ. ಆದರೆ ಗುರು ಜೀವನದ ದಾರಿಯನ್ನು ತೋರಿಸುತ್ತಾರೆ. ಇಂದಿನ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಅಗತ್ಯವಿದೆ. ಪೋಷಕರು ಮಕ್ಕಳಿಗಾಗಿ ಅಪಾರ ತ್ಯಾಗ ಮಾಡುತ್ತಿರುವುದನ್ನು ಸ್ಮರಿಸಿ, ಅವರ ಕನಸುಗಳನ್ನು ನನಸಾಗಿಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ’ ಎಂದರು.
ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಎ.ಬಿ.ಶಿವರಾಮು ಮಾತನಾಡಿ, ‘ನಮ್ಮ ಸಂಸ್ಥೆಯಲ್ಲಿ ಪ್ರೀ-ಕೆಜಿ ಹಂತದಿಂದ ಪಿಎಚ್ಡಿ ಮಟ್ಟದವರೆಗೆ ಶಿಕ್ಷಣದ ಅವಕಾಶ ಒದಗಿಸಲಾಗುತ್ತಿದೆ. 120 ಪಿಯು ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, 28,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ’ ಎಂದರು.
ಪ್ರಾಂಶುಪಾಲ ದಿವ್ಯ ಕುಮಾರ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.