ಹಾಸನ: ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾ ರೆಡ್ ಕ್ರಾಸ್ ಭವನದಲ್ಲಿ 3 ದಿನ ಏರ್ಪಡಿಸಲಾಗಿತ್ತು. ಪ್ರದರ್ಶನ ವೀಕ್ಷಿಸಿದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು, ಪಕ್ಷಿ ಪ್ರಪಂಚ ಅರಿಯಲು ಇದು ಸಹಕಾರಿಯಾಗಿದೆ. ಶೈಕ್ಷಣಿಕವಾಗಿ ಅನುಕೂಲವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಅರಣ್ಯ ಇಲಾಖೆ ಹಾಗೂ ಹಾಸನದ ಚಿಕ್ಕಲಾ ಫೌಂಡೇಶನ್ ವತಿಯಿಂದ ಪಕ್ಷಿ ತಜ್ಞ ಡಾ.ಸಲೀಂ ಅಲಿ ಅವರ 127 ಜಯಂತಿ ಅಂಗವಾಗಿ ಡಿ.1 ರಿಂದ ಆರಂಭವಾಗಿರುವ ಪ್ರದರ್ಶನದಲ್ಲಿ 350 ಕ್ಕೂ ಹೆಚ್ಚು ಪಕ್ಷಿ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು.
ಪ್ರದರ್ಶನ ಡಿ.5ರವರೆಗೂ ನಡೆಯಲಿದೆ. ಪಕ್ಷಿಗಳ ಛಾಯಚಿತ್ರ ಪ್ರದರ್ಶನ ಕುರಿತಂತೆ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮವನ್ನು ಡಿ.10 ರಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.
ಛಾಯಾ ಚಿತ್ರಗಳ ಪ್ರದರ್ಶನವನ್ನು ವೀಕ್ಷಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜು, ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂತಹ ವಿಶೇಷ ಪಕ್ಷಿಗಳ ಛಾಯಾಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ. ಇದೊಂದು ಅತ್ಯುತ್ತಮ ಪ್ರದರ್ಶನ ಎಂದು ಅಭಿಪ್ರಾಯಪಟ್ಟರು.
ಕಾಡುಗಳು ನಶಿಸಿ ಹೋಗುತ್ತಿರುವುದರಿಂದ ಕೆಲವು ಪಕ್ಷಿಗಳು ಪ್ರಕೃತಿಯಿಂದ ದೂರವಾಗುತ್ತಿವೆ. ಅವುಗಳನ್ನು ರಕ್ಷಿಸಬೇಕು. ಇದ್ದರಿಂದ ಪಕ್ಷಿಗಳ ಸಂಕುಲ ಉಳಿಯುತ್ತದೆ ಎಂದು ತಿಳಿಸಿದರು.
ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ, ರೆಡ್ ಕ್ರಾಸ್ ಜಿಲ್ಲಾ ಘಟಕದ ಅಧ್ಯಕ್ಷ ಹೆಮ್ಮಿಗೆ ಮೋಹನ್, ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.