ಹಾಸನ: ಹೊಳೆನರಸೀಪುರ ತಾಲ್ಲೂಕಿನ ಎರಡು ಮತಗಟ್ಟೆಗಳಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ದೂರು ನೀಡಿದ್ದ ಬಿಜೆಪಿ ಬೂತ್ ಏಜೆಂಟ್ ಮಾಯಣ್ಣ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ಸಂಸದ ಎಚ್.ಡಿ.ದೇವೇಗೌಡ ಅವರು ಮತ ಚಲಾಯಿಸಿದ್ದ ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಬಿಜೆಪಿ ಏಜೆಂಟ್ ಆಗಿದ್ದ ಮಾಯಣ್ಣ ಅವರು ಮತಗಟ್ಟೆ ಸಂಖ್ಯೆ 200 ಹಾಗೂ 277 ರಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಚುನಾವಣಾಧಿಕಾರಿಗೆ ದೂರು ನೀಡಿದ್ದರು.
ಈ ಸಂಬಂಧ ಪರಿಶೀಲನೆ ನಡೆಸಿದ್ದ ಚುನಾವಣಾ ಹಾಗೂ ಪೊಲೀಸ್ ಅಧಿಕಾರಿಗಳು ಮಾಯಣ್ಣ ಅವರ ಆರೋಪದಲ್ಲಿ ಹುರುಳಿಲ್ಲ. ಸಾರ್ವಜನಿಕರ ದಾರಿ ತಪ್ಪಿಸುವ ಉದ್ದೇಶದಿಂದ ಸುಳ್ಳು ದೂರು ನೀಡಿದ್ದಾರೆಂದು ತಿಳಿಸಿದ್ದಾರೆ. ಹಾಗಾಗಿ ಸೆಕ್ಟರ್ ಅಧಿಕಾರಿ ದೇವರಾಜು ಅವರು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಡುವಲಹಿಪ್ಪೆ ಮತಗಟ್ಟೆ ಸಂಖ್ಯೆ 244ರಲ್ಲಿ ಸಚಿವ ಎಚ್.ಡಿ.ರೇವಣ್ಣ ಅಕ್ರಮ ಮತದಾನ ಮಾಡಿಸಿದ್ದಾರೆ ಎಂದು ಆರೋಪಿಸಿ ಏ. 24ರಂದು ಬೂತ್ನ ಬಿಜೆಪಿ ಏಜೆಂಟ್ರಾಗಿದ್ದ ಮಾಯಣ್ಣ ಹಾಗೂ ಕೆ.ಎನ್.ರಾಜು ಜಿಲ್ಲಾ ಚುನಾವಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋರ್ ಗೆ ದೂರು ಸಲ್ಲಿಸಿದ್ದರು.
ಅಲ್ಲದೇ ಹೊಳೆನರಸೀಪುರ ತಾಲ್ಲೂಕಿನ 20ಕ್ಕೂ ಅಧಿಕ ಕೇಂದ್ರಗಳಲ್ಲಿ ಅಕ್ರಮ ಮತದಾನ ನಡೆದಿದೆ ಎಂದು ಆರೋಪ ಮಾಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿ, ಮತಗಟ್ಟೆ ಅಧಿಕಾರಿ ಹಾಗೂ ಇಬ್ಬರು ಸಹಾಯಕ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.