ಅರಸೀಕೆರೆ: ‘ದೇಶದ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಠೇವಣಿ ಕಳೆದುಕೊಂಡಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.
ನಗರದ ಜೇನುಕಲ್ಲು ಕ್ರೀಡಾಂಗಣ ಬಳಿಯ ಸಿಂಧೂ ಭವನದಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕಿನ ಸ್ಥಳೀಯ ಸಂಸ್ಥೆಗಳ ಜೆಡಿಎಸ್ ಪಕ್ಷದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
‘ಹಾನಗಲ್ ಉಪ ಚುನಾವಣೆಯಲ್ಲೂ ಆಡಳಿತಾರೂಢ ಬಿಜೆಪಿ ಸೋತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಜೀವನ ನಡೆಸುವುದೇ ಕಷ್ಟವಾಗಿದೆ. ಜಿಲ್ಲೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಕೊಡುಗೆ ಜಿಲ್ಲೆಗೆ ಶೂನ್ಯ’ ಎಂದು ಟೀಕಿಸಿದರು.
‘ಬಿಜೆಪಿಯವರು ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೂ ಅಡ್ಡಿಪಡಿಸಲುಪ್ರಯತ್ನಿಸಿದರು. ಛಲ ಬಿಡದೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ಕಾಮಗಾರಿ ನಡೆಯುವಂತೆ ಮಾಡಿದ್ದಾರೆ’ ಎಂದರು.
‘ಹಾಸನದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಸಾಧನೆ ಶೂನ್ಯ. ಎಚ್.ಡಿ. ದೇವೇಗೌಡರು ಹಿಂದೆ ನೀರಾವರಿ ಸಚಿವರಾಗಿದ್ದಾಗ ಜಿಲ್ಲೆಯ ನೀರಾವರಿ ಯೋಜನೆ ಅನುಷ್ಠಾನಕ್ಕೆ ಶ್ರಮಿಸಿದ್ದಾರೆ. ಜತೆಗೆ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿಯ ರಣಘಟ್ಟ ಏತನೀರಾವರಿ ಯೋಜನೆ ಕಾರ್ಯರೂಪಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪಾತ್ರ ಅನನ್ಯವಾದುದು’ ಎಂದರು.
ಶಾಸಕ ಕೆ. ಎಂ. ಶಿವಲಿಂಗೇಗೌಡ ಮಾತನಾಡಿ, ‘ತಾಲ್ಲೂಕಿನ ಅಭಿವೃದ್ಧಿಗೆ ಹಗಲಿರುಳು ದುಡಿಯುತ್ತಿದ್ದೇನೆ. ಇತ್ತೀಚೆಗೆ ಯಾರೋ ಬೇರೆ ಊರಿನಿಂದ ಬಂದವರು ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ಸಲ್ಲದ ಆರೋಪ ಮಾಡುತ್ತಿದ್ದಾರೆ. ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಾಲ್ಲೂಕಿನ ಜನತೆಗೆ ತಿಳಿದಿದೆ’ ಎಂದರು.
ಚನ್ನರಾಯಪಟ್ಟಣ ಕ್ಷೇತ್ರದ ಶಾಸಕ ಬಾಲಕೃಷ್ಣ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬಿಳಿಚೌಡಯ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹುಚ್ಚೇಗೌಡ, ಜೆಡಿಎಸ್ ಮುಖಂಡರಾದ ಧರ್ಮಶೇಖರ್ ಗೀಜಿಹಳ್ಳಿ, ಅಡವಿಸ್ವಾಮಿ, ಶೇಖರಪ್ಪ ನಾಗವೇದಿ, ಶಿವಮೂರ್ತಿ ಗುತ್ತಿನಕೆರೆ, ಸಮೀವುಲ್ಲಾ, ನಗರಸಭೆ ಉಪಾಧ್ಯಕ್ಷ ಕಾಂತೇಶ್, ನಗರಸಭೆ ಜೆಡಿಎಸ್ ಸದಸ್ಯರು, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.