ನುಗ್ಗೇಹಳ್ಳಿ: ಚನ್ನರಾಯಪಟ್ಟಣ ಪುರಸಭೆಯ ಪೌರಕಾರ್ಮಿಕರ ಹೆಚ್ಚಿನ ಪರಿಶ್ರಮದಿಂದ ಜಿಲ್ಲೆಯಲ್ಲೇ ಚನ್ನರಾಯಪಟ್ಟಣ ತಾಲ್ಲೂಕು ಕೇಂದ್ರ ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಶಾಸಕ ಸಿ.ಎನ್ ಬಾಲಕೃಷ್ಣ ತಿಳಿಸಿದರು.
ಹೋಬಳಿ ಕೇಂದ್ರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.
ಚನ್ನರಾಯಪಟ್ಟಣ ಪಟ್ಟಣ ವ್ಯಾಪ್ತಿಯಲ್ಲಿ ಪುರಸಭಾ ಪೌರಕಾರ್ಮಿಕರ ಹೆಚ್ಚಿನ ಪರಿಶ್ರಮದಿಂದ ಪಟ್ಟಣದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ ಇಡೀ ಜಿಲ್ಲೆಯಲ್ಲಿ ಚನ್ನರಾಯಪಟ್ಟಣಕ್ಕೆ ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಸಿಕ್ಕಿದೆ. ಇದರಿಂದ ಉತ್ತಮ ವಾತಾವರಣದಿಂದ ಪಟ್ಟಣದ ನಿವಾಸಿಗಳಿಗೆ ಶುದ್ಧ ಗಾಳಿ ಸಿಗಲಿದೆ. ಪೌರಕಾರ್ಮಿಕರ ಕೆಲಸ ಅನನ್ಯವಾಗಿದೆ ಎಂದರು.
ಹೋಬಳಿ ಕೇಂದ್ರದ ಆಯ್ದ ಭಾಗಗಳಲ್ಲಿ ಪುರಸಭೆಯ ಪೌರಕಾರ್ಮಿಕರ ನೆರವಿನಿಂದ ಸುಮಾರು ಒಂದು ವಾರ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ನುಗ್ಗೇಹಳ್ಳಿ ಹೋಬಳಿ ಕೇಂದ್ರ ದಿನೇ ದಿನೇ ಹೆಚ್ಚು ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ತಮ್ಮ ಮನವಿ ಮೇರೆಗೆ ಪೌರಕಾರ್ಮಿಕರು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಆರ್. ಶಿವಕುಮಾರ್ ಮಾತನಾಡಿ, ಶಾಸಕರ ಮನವಿ ಮೇರೆಗೆ ಪೌರಕಾರ್ಮಿಕರು ಚನ್ನರಾಯಪಟ್ಟಣ ಮುಖ್ಯರಸ್ತೆಯಲ್ಲಿ ಬರುವ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಪೊಲೀಸ್ ವಸತಿ ನಿಲಯದ ಮುಂಭಾಗ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಿಪಟೂರು ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್, ಕೃಷಿ ಪತ್ತಿನ ಮಾಜಿ ಅಧ್ಯಕ್ಷ ಹುಲಿಕೆರೆ ಸಂಪತ್ ಕುಮಾರ್, ಗ್ರಾ.ಪಂ ಸದಸ್ಯರಾದ ಹೊನ್ನೇಗೌಡ, ಎನ್.ಎಸ್ ಮಂಜುನಾಥ್, ನಟರಾಜ್ ಯಾದವ್, ರಮ್ಯಾ ಲೋಕೇಶ್, ಮುಖಂಡರಾದ ಎನ್ ಎಸ್ ಲಕ್ಷ್ಮಣ್ , ಮಹಾದೇವಮ್ಮ ಶಂಕರ್, ಕೃಷಿ ಪತ್ತಿನ ನಿರ್ದೇಶಕ ಪಟೇಲ್ ಕುಮಾರ್, ಸುಹೀಲ್, ಅಪ್ಪಾಜಿ, ಜೆಸಿಬಿ ಶೇಖರ್, ಪಿಡಿಒ ಶಿವರಾಂ, ಬಿಲ್ ಕಲೆಕ್ಟರ್ ನಾಗರಾಜು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.