ನುಗ್ಗೇಹಳ್ಳಿ: ಭಾರತವು ವಿಶ್ವಮಟ್ಟದಲ್ಲಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೂ ದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಸಾಧ್ಯವಾಗುತ್ತಿಲ್ಲ. ಈ ಪದ್ಧತಿಯನ್ನು ಹೋಗಲಾಡಿಸಲು ಎಲ್ಲರ ಸಹಕಾರ ಮುಖ್ಯ ಎಂದು ನುಗ್ಗೇಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಭರತ್ ರೆಡ್ಡಿ ಅಭಿಪ್ರಾಯಪಟ್ಟರು.
ಹೋಬಳಿ ಕೇಂದ್ರದಲ್ಲಿ ಚನ್ನರಾಯಪಟ್ಟಣ ಪೂರ್ಣಚಂದ್ರ ಪಬ್ಲಿಕ್ ಶಾಲೆ ಹಾಗೂ ಮಲ್ನಾಡ್ ಅಂತರರಾಷ್ಟ್ರೀಯ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಕ್ಕಳಿಗೆ ಉಚಿತ ಶಿಕ್ಷಣ ಕೊಡುತ್ತಿವೆ. ಆದರೆ, ಕೆಲ ಬಡ ಕುಟುಂಬಗಳು ಜೀವನ ನಡೆಸುವುದು ಕಷ್ಟವಾಗಿ, ಮಕ್ಕಳಿಗೆ ಶಿಕ್ಷಣ ಕೊಡಿಸದೆ ಜೀತ ಪದ್ಧತಿಗೆ ದೂಡುತ್ತಾರೆ. ಇದರಿಂದ ಅಂತಹ ಮಕ್ಕಳ ಭವಿಷ್ಯದ ಮೇಲೆ ಕತ್ತಲು ಆವರಿಸಿದೆ ಎಂದರು.
ಬಾಲಕಾರ್ಮಿಕ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ಬಾಲಕಾರ್ಮಿಕ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಬಹುದು ಎಂದರು.
ಪೂರ್ಣಚಂದ್ರ ಪಬ್ಲಿಕ್ ಶಾಲೆ ಹಾಗೂ ಮಲ್ನಾಡ್ ಅಂತರರಾಷ್ಟ್ರೀಯ ಶಾಲೆಯ ಮಕ್ಕಳಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ, ನಂತರ ಹೋಬಳಿ ಕೇಂದ್ರದ ಕೆಲವು ಕಡೆಗಳಲ್ಲಿ ಬಾಲಕಾರ್ಮಿಕ ವಿರೋಧಿ ಜಾಗೃತಿ ಮೂಡಿಸಲು ಕಿರು ನಾಟಕಗಳನ್ನು ಮಕ್ಕಳು ಪ್ರದರ್ಶಿಸಿದರು.
ಪೂರ್ಣಚಂದ್ರ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಧನಲಕ್ಷ್ಮಿ, ಮಲ್ನಾಡ್ ಅಂತರರಾಷ್ಟ್ರೀಯ ಶಾಲೆಯ ಪ್ರಾಂಶುಪಾಲರಾದ ಸಾವಿತ್ರಿ, ಶಿಕ್ಷಕರಾದ ಮಂಜುನಾಥ್, ರವಿ ನಾಯಕ್, ಭಾವನ, ಚೇತನ್, ಕವಿತಾ, ವಿವೇಕ್ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.