
ಸಕಲೇಶಪುರ: ‘ಕನ್ನಡ ಕಲಿಕೆ ಉಳಿಕೆ ಸರ್ಕಾರಿ ಶಾಲೆಗಳಲ್ಲಿ ಮಾತ್ರವೇ ಇಂದು ಕಾಣುತ್ತಿದೆ. ಸರ್ಕಾರಿ ಶಾಲೆಗಳನ್ನು ಹಂತ ಹಂತವಾಗಿ ಮುಚ್ಚುತ್ತಾ ಹೋದರೆ ಕನ್ನಡದ ಉಳಿವು ಹೇಗೆ ಎಂಬ ಆತಂಕ ಉಂಟಾಗಿದೆ’ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಇಲ್ಲಿಯ ಸುಭಾಷ್ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘25 ವರ್ಷಗಳ ಹಿಂದೆ ಇಡೀ ರಾಜ್ಯದಲ್ಲಿ ಶೇ.90ಕ್ಕಿಂತ ಹೆಚ್ಚು ಮಂದಿ ಕನ್ನಡ ಮಾತನಾಡುತ್ತಿದ್ದರು. ಆದರೆ ಇಂದು ಕನ್ನಡ ಭಾಷೆಯ ಮೇಲೆ ಇಂದಿನ ಮಕ್ಕಳಿಗೆ ಅಭಿಮಾನ ಹಾಗೂ ಪ್ರೀತಿ ಕಡಿಮೆ ಆಗುತ್ತಿದೆ’ ಎಂದರು.
ಉಪವಿಭಾಗಾಧಿಕಾರಿ ಎಚ್.ಡಿ. ರಾಜೇಶ್ ಮಾತನಾಡಿ, ‘ಕನ್ನಡ ಭಾಷೆಗೆ ಐತಿಹಾಸಿಕ ಹಾಗೂ ಸಾಹಿತ್ಯದ ಶ್ರೀಮಂತಿಕೆ ಇದೆ. ಇಂತಹ ಭಾಷೆಯನ್ನು ಸಂರಕ್ಷಣೆ ಮಾಡುವ ಹೊಣೆ ಪ್ರತಿಯೊಬ್ಬ ಕನ್ನಡಿಗರಿಗೆ ಇದೆ’ ಎಂದರು.
ತಹಶೀಲ್ದಾರ್ ಕೆ.ಎಸ್. ಸುಪ್ರೀತಾ, ಕ್ಷೇತ್ರ ಶಿಕ್ಷಣ ಅಧಿಕಾರಿ ಪುಷ್ಪ, ತಾಲ್ಲೂಕು ಪಂಚಾಯಿತಿ ಇಒ ಗಂಗಾಧರ್, ಪುರಸಭಾ ಅಧ್ಯಕ್ಷೆ ಜ್ಯೋತಿ ರಾಜ್ಕುಮಾರ್, ಉಪಾಧ್ಯಕ್ಷೆ ಜರೀನಾ, ಪುರಸಭಾ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಶಾರದಾ ಗುರುಮೂರ್ತಿ, ತಾ.ಪಂ. ಮಾಜಿ ಅಧ್ಯಕ್ಷ ಬೆಕ್ಕನಹಳ್ಳಿ ನಾಗರಾಜ್, ಕರ್ನಾಟಕ ರಕ್ಷಣಾ ವೇದಿಕೆ, ಮಲೆನಾಡು ರಕ್ಷಣಾ ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಇದ್ದರು.
ಇಲ್ಲಿಯ ಜೆಎಸ್ಎಸ್ ಶಿಕ್ಷಣ ಸಂಸ್ಥೆಗಳ ಸಂಯೋಜಕ ಮಂಜುನಾಥ್, ಪತ್ರಿಕೋಧ್ಯಮ ಕ್ಷೇತ್ರದಲ್ಲಿ ಹೆತ್ತೂರು ರವಿಕುಮಾರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.