ಹಾಸನ: ನಗರದಲ್ಲಿನ ಗೋದಾಮಿನಲ್ಲಿ ಲಾರಿಯಿಂದ ಇಳಿಸುತ್ತಿದ್ದ ಸುಮಾರು 25 ಟನ್ ಏಕಬಳಕೆ ಪ್ಲಾಸ್ಟಿಕ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರಸಭೆ ಆಯುಕ್ತ ಸತೀಶ್ ತಿಳಿಸಿದ್ದಾರೆ.
ನಗರದ 34 ನೇ ವಾರ್ಡ್ನ ಚನ್ನಪಟ್ಟಣ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯ ಗೋದಾಮಿಗೆ ಬೀಗಮುದ್ರೆ ಹಾಕಲಾಗಿದೆ. ಗೋದಾಮು ಮಾಲೀಕ ಬದರಿನಾಥ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಾಯಕ ಪರಿಸರ ಅಧಿಕಾರಿಗೆ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಸಭೆ ನಡೆಸಿ, ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್ ಮಾರಾಟ ಮತ್ತು ದಾಸ್ತಾನು ತಡೆಯುವಂತೆ ಸೂಚನೆ ನೀಡಿದ್ದರು. ಅದರಂತೆ ಶುಕ್ರವಾರ ದಾಳಿ ನಡೆಸಿ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದೆ. ಇಂತಹ ಕಾರ್ಯಾಚರಣೆ ಮುಂದುವರಿಯಲಿದ್ದು, ಪ್ಲಾಸ್ಟಿಕ್ ದಾಸ್ತಾನು ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದಾಳಿ ವೇಳೆ ನಗರಸಭೆ ಅಧ್ಯಕ್ಷ ಮೋಹನ್, ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.