ADVERTISEMENT

ಬಡ ಮಕ್ಕಳ ಶಾಲಾ ಕಟ್ಟಡದಲ್ಲೂ ಕಮಿಷನ್‌

ಡಾ.ರಾಧಾಕೃಷ್ಣನ್‌ ಜನ್ಮದಿನಾಚರಣೆ ಉದ್ಘಾಟಿಸಿದ ಶಾಸಕ ಎಚ್‌.ಡಿ. ರೇವಣ್ಣ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2025, 2:46 IST
Last Updated 14 ಸೆಪ್ಟೆಂಬರ್ 2025, 2:46 IST
ಹೊಳೆನರಸೀಪುರದ ಶಿಕ್ಷಕರ ಭವನದಲ್ಲಿ ಶನಿವಾರ ಆಯೋಜನೆ ಮಾಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನು ಶಾಸಕರಾದ ಎಚ್.ಡಿ.ರೇವಣ್ಣ ಹಾಗೂ ಎ.ಮಂಜು ಗೌರವಿಸಿದರು.
ಹೊಳೆನರಸೀಪುರದ ಶಿಕ್ಷಕರ ಭವನದಲ್ಲಿ ಶನಿವಾರ ಆಯೋಜನೆ ಮಾಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆಯಲ್ಲಿ ನಿವೃತ್ತ ಶಿಕ್ಷಕರನ್ನು ಶಾಸಕರಾದ ಎಚ್.ಡಿ.ರೇವಣ್ಣ ಹಾಗೂ ಎ.ಮಂಜು ಗೌರವಿಸಿದರು.   

ಹೊಳೆನರಸೀಪುರ: ಶಿಕ್ಷಣ ಕ್ಷೇತ್ರಕ್ಕೆ ಇಂದಿನ ಸರ್ಕಾರ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗಿದೆ. ಶಿಕ್ಷಣಕ್ಕೆ ಒತ್ತು ನೀಡುವುದನ್ನು ಬಿಟ್ಟು, ಬಡ ಮಕ್ಕಳ ಶಾಲಾ ಕಟ್ಟಡ ನಿರ್ಮಾಣದಲ್ಲೂ ಕಮಿಷನ್ ಹೊಡೆಯುತ್ತಾರೆ. ಇನ್ನೂ 2 ವರ್ಷವಷ್ಟೆ, ಸುಮ್ಮನಿರಿ, ಅಗತ್ಯ ಬದಲಾವಣೆ ಮಾಡಿ ತೋರಿಸುವೆ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.

ಪಟ್ಟಣದ ಶಿಕ್ಷಕರ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಯೋಜನೆ ಮಾಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಿಕ್ಷಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡುವ ಜೊತೆಗೆ ಪೂರ್ವಿಕರು ಸ್ಥಾಪಿಸಿದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು. ಪ್ರತಿ ಹೋಬಳಿಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪಿಸುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನೀಡುವ ಶಿಕ್ಷಣದಿಂದ ಬಡವರ ಮಕ್ಕಳು ಶೇ 95ಕ್ಕೂ ಹೆಚ್ಚು ಅಂಕ ಪಡೆಯಲು ಸಾಧ್ಯವಾಗಿದೆ. ಇಂತಹ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಟ್ಟರೆ ಶೇ100 ಅಂಕ ಪಡೆಯಲು ಸಾಧ್ಯವಾಗುತ್ತದೆ ಎಂದು ಶಿಕ್ಷಕರ ಕಾರ್ಯವನ್ನು ಶ್ಲಾಘಿಸಿದರು.

ಸೇವೆಯಲ್ಲಿದ್ದಾಗ ನಿಧನರಾದ ಶಿಕ್ಷಕರ ಕುಟುಂಬದವರಿಗೆ ಸಾಂತ್ವನ ಹಾಗೂ ಗೌರವ ಸಮರ್ಪಣೆ ಮಾಡಲಾಯಿತು. ನಿವೃತ್ತ ಶಿಕ್ಷಕರು, ಉಪನ್ಯಾಸಕರು, ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸಲಾಯಿತು.

ಶಿಕ್ಷಕಿ ಪುಷ್ಪಲತಾ ತಂಡ ಪ್ರಾರ್ಥಿಸಿದರು, ಉಮೇಶ್ ತಂಡದವರು ನಾಡಗೀತೆ ಹಾಗೂ ರೈತಗೀತೆ ಹಾಡಿದರು. ಬಿಇಒ ಸೋಮಲಿಂಗೇಗೌಡ ಸ್ವಾಗತಿಸಿದರು. ಶಿವಕುಮಾರಚಾರ್ ನಿರೂಪಿಸಿದರು.

ಹಾಸನದ ಎವಿಕೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಾಹಿತಿ ಡಾ. ಸೀ.ಚ.ಯತೀಶ್ವರ್ ಪ್ರಧಾನ ಭಾಷಣ ಮಾಡಿದರು. ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ, ಬ್ಯಾಂಕ್ ಆಫ್ ಬರೋಡಾ ಶಾಖೆಯ ಚೈತ್ರಾ, ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೃಥ್ವಿರಾಜ್, ಕ್ಷೇತ್ರ ಸಮನ್ವಯಾಧಿಕಾರಿ(ಪ್ರಭಾರ) ಕಾಳೇಗೌಡ, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಾಲಿಂಗ, ತಾಪಂ ಇಒ ಮುನಿರಾಜ್, ಪ್ರಾಂಶುಪಾಲರಾದ ಕುಮಾರಸ್ವಾಮಿ ಹಾಗೂ ದೇವರಾಜ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಮಚಂದ್ರಪ್ಪ, ಶಿಕ್ಷಕರಾದ ಸೋಮಣ್ಣಯ್ಯ, ಎಂ.ಟಿ.ರಂಗಸ್ವಾಮಿ, ಗಣೇಶ್, ಕಾಂತರಾಜು ಎಚ್.ಎಚ್., ಎಸ್.ಎನ್.ಎಂ.ಖಾದ್ರಿ, ಸುಜಾತ ಅಲಿ, ಶೇಖರ್, ಜನಾರ್ಧನ್, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.