ADVERTISEMENT

‘ಭ್ರಷ್ಟಾಚಾರ ಮುಚ್ಚಿ ಹಾಕಲು ಕೋಮುವಾದ ಮುನ್ನೆಲೆಗೆ’

ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2022, 15:17 IST
Last Updated 17 ಏಪ್ರಿಲ್ 2022, 15:17 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಹಾಸನ: ‘ರಾಜ್ಯ ಸರ್ಕಾರದ ಭ್ರಷ್ಟಾಚಾರ ಮುಚ್ಚಿ ಹಾಕಲಿಕ್ಕಾಗಿಯೇ ಕೋಮುವಾದವನ್ನು ಮುನ್ನೆಲೆಗೆ ತರಲಾಗಿದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

‘ಕೇಂದ್ರದಲ್ಲಿ ಎಂಟು ವರ್ಷದಿಂದ ಮತ್ತು ರಾಜ್ಯದಲ್ಲಿ ಮೂರು ವರ್ಷದಿಂದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ ಮುಚ್ಚಿ ಹಾಕಲು ದ್ವೇಷದ ರಾಜಕಾರಣ ಮಾಡಲಾಗುತ್ತಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ ಮುಖ್ಯಮಂತ್ರಿಗೂ ಪತ್ರ ಬರೆದಿದ್ದರೂ; ಕ್ರಮ ಕೈಗೊಳ್ಳಲಿಲ್ಲ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಡಿವೈಎಸ್‌ಪಿ ಗಣಪತಿ, ಕಲ್ಲಪ್ಪ ಹಂಡಿಭಾಗ್‌ ಪ್ರಕರಣಕ್ಕೂ ಇದಕ್ಕೂ ಸಂಬಂಧವಿಲ್ಲ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್‌ಗೆ ಸಿಬಿಐ ಕ್ಲೀನ್‌ಚಿಟ್ ನೀಡಿದೆ. ಕಲ್ಲಪ್ಪ ಹಂಡಿಭಾಗ್ ಪತ್ನಿಗೆ ಕಾಂಗ್ರೆಸ್‌ ಸರ್ಕಾರ ಉದ್ಯೋಗ ನೀಡಿದೆ. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಚಟಕ್ಕಾಗಿ ಮಾತನಾಡಬಾರದು. ಸಕಾರಣದಿಂದ ಮಾತನಾಡಬೇಕು’ ಎಂದು ತಿರುಗೇಟು ನೀಡಿದರು.

ADVERTISEMENT

‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಕಾಂಗ್ರೆಸ್ ಏಜೆಂಟ್‌ ಎಂದು ಬಿಜೆಪಿನಾಯಕರು ಆರೋಪಿಸುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರ್ಕಾರವೇ ತನಿಖೆನಡೆಸಲಿ, ಸತ್ಯಾಂಶ ಹೊರ ಬರಲಿ. ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಇದೆ. ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚು ಎಂದು ಕೆಂಪಣ್ಣ ಆರೋಪಿಸಿದ್ದಾರೆ. ಈವರೆಗೂ ಕೆಂಪಣ್ಣ ಅವರನ್ನು ಭೇಟಿ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ಮುಖಂಡ ಚಂದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.