ಹಾಸನ: ‘ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಷರತ್ತುಬದ್ಧ ಅನುಮತಿ ನೀಡಿದ್ದು, ಮೆರವಣಿಗೆ ಮಾಡುವುದು ಮತ್ತು 20ಕ್ಕಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಗಣೇಶ ಉತ್ಸವ ಆಚರಣೆ ಕುರಿತು ಆಯೋಜಿಸಿದ್ದ ಸಂಘ ಸಂಸ್ಥೆಗಳ ಸಭೆ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡುವುದುಕಡ್ಡಾಯ. ಒಂದು ಬಾರಿಗೆ 20ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
‘ಗಣೇಶನ ಮೂರ್ತಿ ಪ್ರತಿಷ್ಠಾಪಿಸುವಾಗ ಮತ್ತು ವಿಸರ್ಜನೆ ಮಾಡುವಾಗ ಉತ್ಸವ ಮಾಡುವಂತಿಲ್ಲ. ಮೊದಲು ಜಿಲ್ಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ತಿಂಗಳುಗಟ್ಟಲೆ ಪೂಜೆ ಪುನಸ್ಕಾರ ಮಾಡುತ್ತಿದ್ದರು. ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಿದ್ದು, 1 ಅಥವಾ 3 ದಿನಗಳಲ್ಲಿ ಮೂರ್ತಿ ವಿಸರ್ಜಿಸಲು ಎಲ್ಲರೂ ಸಮ್ಮತಿಸಿದ್ದಾರೆ’ ಎಂದು ಹೇಳಿದರು.
ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದವರಿಗೆ ವಿಸರ್ಜಿಸಲು ನಗರಸಭೆ ವತಿಯಿಂದ ಟ್ಯಾಂಕರ್ ವ್ಯವಸ್ಥೆಮಾಡಲಾಗುವುದು. ಪಿಒಪಿ ಹಾಗೂ ರಾಸಾಯನಿಕಯುಕ್ತ ಬಣ್ಣ ಬಳಸಿದ ಗಣೇಶ ಮೂರ್ತಿಗಳ ಮಾರಾಟ ಮಾಡುವಂತಿಲ್ಲ. ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಮಾತನಾಡಿ, ಜಿಲ್ಲೆಯಲ್ಲಿ ದಿನದಿಂದ ದಿನ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಸಾಕಷ್ಟು ಬಾರಿ ಮನವಿ ಮಾಡಿದರೂ ಮದುವೆ ಹಾಗೂ ಮತ್ತಿತರೆಸಮಾರಂಭಗಳಲ್ಲಿ ನೂರಾರು ಜನ ಭಾಗವಹಿಸಿದ್ದಾರೆ. ಈಗಾಗಲೇ ಎಚ್ಚರಿಕೆ ನೀಡಿದ್ದರೂ, ಮತ್ತೆ ಮತ್ತೆ ಮರುಕಳಿಸುತ್ತಿರುವ ಕಾರಣ ಮದುವೆ ಆಯೋಜಕರು ಮತ್ತು ಹೆಚ್ಚು ಜನ ಸೇರಲು ಅವಕಾಶ ಮಾಡಿಕೊಟ್ಟರೆ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.