ADVERTISEMENT

ಹಾಸನ| ಫಲಾನುಭವಿಗಳ ಸಮ್ಮೇಳನ: ಅರ್ಚನಾ ಸಿದ್ಧತೆಗೆ ಸೂಚನೆ

ಮಾ.13 ರಂದು ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2023, 5:25 IST
Last Updated 9 ಮಾರ್ಚ್ 2023, 5:25 IST
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವ ಸಿದ್ಧತಾ ಸಭೆ ನಡೆಯಿತು.
ಹಾಸನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವ ಸಿದ್ಧತಾ ಸಭೆ ನಡೆಯಿತು.   

ಹಾಸನ: ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಮಾ.13 ರಂದು ಆಯೋಜಿಸಲಾಗುವ ಫಲಾನುಭವಿಗಳ ಸಮ್ಮೇಳನಕ್ಕೆ ಎಲ್ಲ ರೀತಿಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅರ್ಚನಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಫಲಾನುಭವಿಗಳ ಸಮಾವೇಶದಲ್ಲಿ ವಿವಿಧ ಸಚಿವರು ಪಾಲ್ಗೊಳ್ಳಲ್ಲಿದ್ದು, 15 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗಬಾರದು. ಫಲಾನುಭವಿಗಳನ್ಮು ಇಲಾಖಾವಾರು ಗುರುತಿಸಿ ಕರೆ ತರಬೇಕು. ಉದ್ಘಾಟನೆಗೆ ಹಾಗೂ ಶಿಲಾನ್ಯಾಸಕ್ಕೆ ಸಿದ್ದವಾಗಿರುವ ಕಾಮಗಾರಿಗಳ ಪಟ್ಟಿಯನ್ನು ತಕ್ಷಣವೇ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ADVERTISEMENT

ಬೇರೆ ತಾಲ್ಲೂಕಿನಿಂದ ಬರುವ ಫಲಾನುಭವಿಗಳನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲಾಗುವುದು. ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಪಂಚಾಯಿತಿಗಳೊಂದಿಗೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಲು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದ ಫಲಾನುಭವಿಗಳನ್ನು ಕರೆತರಲು ಮಾಡಲಾಗಿರುವ ಸಿದ್ದತೆಗಳ ಬಗ್ಗೆ ತಿಳಿಸಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮಗೆ ವಹಿಸಿರುವ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿಭಾಯಿಸುವಂತೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ ಬಿ.ಆರ್. ಪುನಿತ್, ಮುಖ್ಯ ಯೋಜನಾಧಿಕಾರಿ ಪರಪ್ಪಸ್ವಾಮಿ, ಇಲಾಖಾವಾರು ಫಲಾನುಭವಿಗಳ ಆಯ್ಕೆ, ಸವಲತ್ತು ವಿತರಣೆಗೆ ಮಾಡಲಾಗಿರುವ ಸಿದ್ದತೆ ವಿವರಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್, ವಿವಿಧ ಇಲಾಖಾ ಅಧಿಕಾರಿಗಳು, ತಹಶೀಲ್ದಾರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.