ಹಾಸನ: ಐದು ದಶಕ ಆಡಳಿತ ನಡೆಸಿದರೂ ರಾಜ್ಯದ ನೀರಾವರಿ ಯೋಜನೆಗಳಿಗೆ ಕಾಂಗ್ರೆಸ್ ಅನುದಾನ ನೀಡಲಿಲ್ಲ ಎಂದು ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.
ಸುಮಾರು ನಾಲ್ಕು ದಶಕ ಕಾಂಗ್ರೆಸ್ ನವರೇ ನೀರಾವರಿ ಸಚಿವರಾಗಿದ್ದರೂ ಏನು ಮಾಡಲಿಲ್ಲ. ನೀರಾವರಿ ಯೋಜನೆಗಳಿಗೆ ದೇವೇಗೌಡರು ಕಾಯಕಲ್ಪ ನೀಡಿದ್ದಾರೆ. ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆ ಬಗ್ಗೆ ಪ್ರಸ್ತಾಪ ಮಾಡದೇ ಈಗ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯವಾಡಿದರು.
ಚುನಾವಣೆ ಬಂದಾಗ ಜೆಡಿಎಸ್ ಬಿಜೆಪಿಯ ಬಿ ಟೀಂ ಎನ್ನುತ್ತಾರೆ. ಆದರೆ ಅಧಿಕಾರ ಬೇಕಾದರೆ ಕೋಮುವಾದ ಪಕ್ಷದ ವಿರುದ್ಧ ಒಟ್ಟಾಗಿರಬೇಕು ಎನ್ನುತ್ತಾರೆ. ಕೋಲಾರದಲ್ಲಿ ಮುನಿಯಪ್ಪ, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಸಲು ಕಾಂಗ್ರೆಸ್ ಕೆಲಸ ಮಾಡಲಿಲ್ಲವೆಂದು ಹೇಳಲಿ ಎಂದು ಸವಾಲು ಹಾಕಿದರು.
ಪ್ರಾದೇಶಿಕ ಪಕ್ಷ ಜೆಡಿಎಸ್ಗೆ ಅಧಿಕಾರ ನೀಡಿದರೆ ಉಚಿತ ಆರೋಗ್ಯ, ಶಿಕ್ಷಣ, ವಿದ್ಯುತ್ ನೀಡಲಾಗುವುದು ಎಂದು ಭರವಸೆ ನೀಡಿದರು.
ಏ.21ರಂದು ಜನತಾ ಜಲಧಾರೆ ಯಾತ್ರೆ ಅಂಗವಾಗಿ ನಗರದ ತಾಲ್ಲೂಕು ಕಚೇರಿ ಪಕ್ಕದರಸ್ತೆಯಲ್ಲಿ ಸಮಾವೇಶ ಆಯೋಜಿಸಲಾಗಿದ್ದು, ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ, ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಶಾಸಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಮುಖಂಡ ಬಿ.ವಿ.ಕರೀಗೌಡ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.