
ಹಾಸನ: ಒಂದು ಸಂಘ ಅಥವಾ ಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯಲು ಆ ಸಂಘದ ನಿರ್ದೇಶಕರು ಮತ್ತು ಸದಸ್ಯರೇ ಶಕ್ತಿ ಎಂದು ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಬಿ.ಕೆ. ರುದ್ರಪ್ಪ ಹೇಳಿದರು.
ನಗರದ ಎಂ.ಜಿ. ರಸ್ತೆಯ ಇರುವ ವಿಶ್ವೇಶ್ವರಯ್ಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಮೂರು ವರ್ಷಗಳಿಂದ ಸಂಘ ಸ್ಥಾಪನೆಯಾದ ಉದ್ದೇಶದಂತೆ ಪಾರದರ್ಶಕ ಆಡಳಿತ ಮಾಡಿಕೊಂಡು, ಸಂಘದ ಪದಾಧಿಕಾರಿಗಳಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಕಾಮಗಾರಿಯ ಮೂಲಕ ಸುಸಜ್ಜಿತ ಬಡಾವಣೆ ನಿರ್ಮಾಣ ಮಾಡಿ ನಿವೇಶನಗಳನ್ನು ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿ ಮುಂದುವರಿಯಲು ಎಲ್ಲರ ಸಹಕಾರ ಅಗತ್ಯ ಎಂದರು.
ಸಂಘದ ಉಪಾಧ್ಯಕ್ಷ ಡಾ.ಲಕ್ಷ್ಮಿಕಾಂತ್ ಮಾತನಾಡಿ, ಸಂಘದ ಆಯವ್ಯಯ, ಲಾಭ - ನಷ್ಟ, ಮುಂದಿನ ಕಾರ್ಯಯೋಜನೆಗಳ ಬಗ್ಗೆ ವಿವರಿಸಿ, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಹೊಸ ಬಡಾವಣೆ ನಿರ್ಮಿಸಿ, ಸಂಘದ ಸದಸ್ಯರಿಗೆ ಹಸ್ತಾಂತರ ಮಾಡಲು ಎಲ್ಲರ ಸಹಕಾರ ಅಗತ್ಯ ಎಂದರು.
ಹೊಯ್ಸಳ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸದಸ್ಯರು ಹಾಗೂ ನಿರ್ದೇಶಕರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜೊತೆಗೆ ಉತ್ತಮ ಸೇವೆ ಸಲ್ಲಿಸಿದ ನೌಕರರನ್ನು ಗೌರವಿಸಲಾಯಿತು. ಗುರುತಿನ ವಿತರಣೆ ಮಾಡಲಾಯಿತು.
ಕಂಚಮಾರನಹಳ್ಳಿ ಕಾಂತರಾಜ್, ವಿನೇಶ್, ಪದ್ಮರಾಜ್, ಕೆ.ಆರ್. ಮಂಜೇಗೌಡ, ರುದ್ರೇಶ್, ಗೋಪಾಲ್, ಶಿವಾನಂದ್ ನಾಯಕ್, ಸತ್ಯನಾರಾಯಣ, ಕೆ.ಪಿ. ಮಂಜುನಾಥ್, ಮುಷ್ತಾಕ್ ಅಹಮ್ಮದ್ ಶೇಖ್, ವಾಸೀಮ್ ಷರೀಫ್, ಚನ್ನಕೇಶವ, ಕೃಷ್ಣಮೂರ್ತಿ, ತಮ್ಮಣ್ಣ ಶೆಟ್ಟಿ, ಶಿವಸ್ವಾಮಿ, ಸಿ.ಎನ್. ಉಷಾ, ರಘು ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.