ಹೊಳೆನರಸೀಪುರ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ರಾಜ್ಯಸಭಾ ಎಚ್.ಡಿ.ದೇವೇಗೌಡರಿಗೆ ಮುಖ್ಯಮಂತ್ರಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಎಚ್.ಡಿ. ರೇವಣ್ಣ ಆರೋಪಿಸಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ ತಡೆ ಜಾಗೃತಿ ಸಮಿತಿ ಸಭೆ ನಡೆಸಿ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪ ಕೆಲವರ ಓಲೈಕೆಗಾಗಿ ಕೋವಿಡ್ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ, ರಾಜ್ಯದ ಬಡ ರೈತರಿಗೆ, ಕೂಲಿ ಕಾರ್ಮಿಕರಿಗೆ ಸಹಾಯ ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಶೇಕಡಾ 30 ರಷ್ಟು ರೈತರು ಕೂಲಿ ನಂಬಿಬದುಕಿದ್ದಾರೆ. ಆದರೆ, ಇಂದಿನ ಪರಿಸ್ಥಿತಿಯಲ್ಲಿ ಅವರ ಸಮಸ್ಯೆಗೆ ಸ್ಪಂದಿಸದಿದ್ದರೆ ಜನ ರೊಚ್ಚಿಗೇಳುತ್ತಾರೆ. ಅವರು ಹೊಟ್ಟೆತುಂಬಿಸಿಕೊಳ್ಳಲು ಸಹಾಯ ಮಾಡಬೇಕು ಎಂದರು.
ಜಿಲ್ಲೆಯಲ್ಲಿ ಲಸಿಕೆ ನೀಡಲು ರಾಜಕೀಯ ಮಾಡುತ್ತಿದ್ದಾರೆ. ನಾಲ್ಕೈದು ದಿನ ನೋಡಿ, ಇದೇ ಪರಿಸ್ಥಿತಿ ಮುಂದುವರೆದಲ್ಲಿಸಿ.ಎಂ ಮನೆ ಮುಂದೆ ಧರಣಿ ನಡೆಸುವುದು ಅನಿವಾರ್ಯವಾಗುತ್ತದೆ. ಯಾರಿಗೂ ಹೆದರುವುದಿಲ್ಲ. ಆದರೆ ಜನರ ಒಳಿತಿಗಾಗಿ ಅವರ ಮನೆ ಮುಂದೆ ಮಲಗಿ ಹೋರಾಟ ಮಾಡಲು ಸಿದ್ದ ಎಂದು ತಿಳಿಸಿದರು.
ತಾಲ್ಲೂಕಿನ 19 ಪ್ರಾಥಮಿಕ, ಮೂರು ಸಮುದಾಯ ಆರೋಗ್ಯ ಕೇಂದ್ರ ಮತ್ತು ಪುರಸಭೆ ವ್ಯಾಪ್ತಿಯ 5 ಹಳ್ಳಿಹಾಗೂ ವಾರ್ಡ್ಗಳನ್ನು ಆಯ್ಕೆ ಮಾಡಿ, ಪ್ರತಿಯೊಬ್ಬರಿಗೂ ಲಸಿಕೆ ಕೊಡಿಸುವ ಅಭಿಯಾನ ಪ್ರಾರಂಭಿಸಲು ಸೂಚಿಸಿದ್ದೇನೆ. ಅಗತ್ಯಕ್ಕೆ ತಕ್ಕಷ್ಟು ಲಸಿಕೆ ಒದಗಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ, ಕಾರ್ಯನಿರ್ವಾಹಕ ಅಧಿಕಾರಿ ಕೆ.ಯೋಗೇಶ್, ಪುರಸಭೆ ಮುಖ್ಯಾಧಿಕಾರಿ ಶಾಂತಲಾ, ಗ್ರೇಡ್ 2 ತಹಶೀಲ್ದಾರ್ ರವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್, ವೈದ್ಯಾಧಿಕಾರಿ ಡಾ. ಲಕ್ಷ್ಮಿಕಾಂತ್, ಎಂಜಿನಿಯರ್ ಮುರಳಿಧರ, ಪ್ರಶಾಂತ್, ರೇಶ್ಮೆ ಇಲಾಖೆ ಅಧಿಕಾರಿ ನಟರಾಜ್, ವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್, ಮೀನುಗಾರಿಕೆ ಇಲಾಖೆ ಅಧಿಕಾರಿ ಮಲ್ಲೇಶ್ ನಾಯಕ್, ಪಶು ಆಸ್ಪತ್ರೆ ಸಹಾಯಕ ನಿರ್ದೇಶಕ ಡಾ. ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕಿ ಸಪ್ನಾ, ತೋಟಗಾರಿಕೆ ಇಲಾಖೆ ಅಧಿಕಾರಿ ಭವ್ಯ, ಉಪ ತಹಶೀಲ್ದಾರ್ ಶಿವಕುಮಾರ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.