ಹಾಸನ: ಆದ್ಯತಾ ಗುಂಪಿನಲ್ಲಿರುವ ಆಟೋ ಚಾಲಕರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಶಾಸಕ ಪ್ರೀತಂ ಗೌಡ ಚಾಲನೆ ನೀಡಿದರು.
ನೂರಾರು ಚಾಲಕರು ಸರದಿ ಸಾಲಿನಲ್ಲಿ ನಿಂತು ಜಿಲ್ಲಾ ಕ್ರಿಡಾಂಗಣದಲ್ಲಿ ಲಸಿಕೆ ಪಡೆದುಕೊಂಡರು. ಇದೇ ವೇಳೆ ಶಾಸಕರು ಆಟೋ ಚಾಲಕರಿಗೆ ವೈಯಕ್ತಿಕವಾಗಿ ಆಹಾರ ಕಿಟ್ಗಳನ್ನು ವಿತರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರೀತಂ. ‘ಆಟೋ ಚಾಲಕರಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ಅಭಿಯಾನ ರೂಪದಲ್ಲಿ ನಡೆಸಲಾಗುತ್ತಿದೆ. ಮೂರು ದಿನಗಳಲ್ಲಿ 2,000 ಮಂದಿಗೆ ಲಸಿಕೆ ನೀಡಲಾಗುತ್ತದೆ.
ಲಾಕ್ ಡೌನ್ ಸಡಿಲವಾದ ನಂತರ ಆಟೋ ಚಾಲಕರು ಸಾರ್ವಜನಿಕರ ಸೇವೆಯಲ್ಲಿತಿರುಗಾಡುವುದರಿಂದ ಆದ್ಯತೆ ಮೇರೆಗೆ ಲಸಿಕೆ ಹಾಕಲಾಗುತ್ತದೆ’ ಎಂದು ತಿಳಿಸಿದರು.
‘ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ ಲಸಿಕೆ ನೀಡಲಾಗುತ್ತಿದೆ. ನಗರಸಭೆ ಅಧ್ಯಕ್ಷರ ನೇತೃತ್ವದಲ್ಲಿಬೀದಿ ಬದಿ ವ್ಯಾಪಾರಿಗಳಿಗೂ ಶೀಘ್ರ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿಯೂ ಆಟೊ ಚಾಲಕರಿಗೆ ಲಸಿಕೆ ನೀಡಬೇಕು’ ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಒಳಾಂಗಣ ಕ್ರೀಡಾಂಗಣ ಆವರಣದಲ್ಲಿ ಗಿಡ ನೆಡುವ ಮೂಲಕ ವಿಶ್ವಪರಿಸರ ದಿನ ಆಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.