ಹಾಸನ: ಕೊರೊನಾ ಸೋಂಕಿತರಲ್ಲಿ ಮತ್ತೆ ಆರು ಮಂದಿ ಮೃತಪಟ್ಟಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಕೋವಿಡ್ಗೆ ಸಾವಿಗೀಡಾದವರ ಸಂಖ್ಯೆ 20ರಕ್ಕೆ ಏರಿಕೆಯಾಗಿದೆ.
ಹೊಸದಾಗಿ 401 ಕೋವಿಡ್ ಪ್ರಕರಣ ವರದಿಯಾಗಿದ್ದು, ಸೋಂಕಿತರ ಸಂಖ್ಯೆ 15,545 ಕ್ಕೆ ಏರಿಕೆಯಾಗಿದೆ. ಜ್ವರ, ಉಸಿರಾಟದ ಸಮಸ್ಯೆಯಿಂದ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆಲೂರು, ಅರಕಲಗೂಡು ಮತ್ತು ಅರಸೀಕೆರೆ ತಾಲ್ಲೂಕಿನ ತಲಾ ಇಬ್ಬರು ಚಿಕಿತ್ಸೆಗೆ ಸ್ಪಂದಿಸಿಲ್ಲ.
ಸೋಂಕಿತರಲ್ಲಿ 144 ಮಂದಿ ವಾಸಿಯಾಗಿದ್ದು, ಇದರೊಂದಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 12,355 ಕ್ಕೆ ಏರಿಕೆಯಾಗಿದೆ. 2,740 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್ ಹಾಗೂ ಹೋಂ ಐಸೋಲೆಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 53 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸದಾಗಿ ಅರಸೀಕೆರೆಯ 28, ಚನ್ನರಾಯಪಟ್ಟಣ 73, ಆಲೂರು 29, ಹಾಸನ 172, ಹೊಳೆನರಸೀಪುರ 26, ಅರಕಲಗೂಡು 38, ಬೇಲೂರು 20, ಸಕಲೇಶಪುರ 15 ಜನರಿಗೆ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.
ಜ್ವರ, ಕೆಮ್ಮು, ಶೀತ, ತಲೆನೋವು ಇದ್ದಲ್ಲಿ ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು.
ಅಕ್ಕ ಪಕ್ಕದ ಮನೆಯಲ್ಲಿ ಯಾರಿಗಾದರೂ ರೋಗ ಲಕ್ಷಣಗಳಿದ್ದಲ್ಲಿ ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ಮಾಹಿತಿ ನೀಡಬೇಕು. ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಕುಟುಂಬ ಸದಸ್ಯರಿಂದ ಸಾಧ್ಯವಾದಷ್ಟು ಅಂತರ ಕಾಯ್ದುಕೊಳ್ಳಬೇಕು. ಸಭೆ, ಸಮಾರಂಭಗಳಿಂದ ದೂರ ಇರುವುದು ಒಳಿತು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.