ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಗ್ರಾಮದ ಕೆರೆ ಏರಿಯ ಮೇಲೆ ಗುರುವಾರ ರಾತ್ರಿ ಯುವಕನೊಬ್ಬನನ್ನು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.
ತಾಲ್ಲೂಕಿನ ಹೊಸೂರು ಗ್ರಾಮದ ಹೇಮಂತ್ ಎಂಬವರ ಹಿರಿಯ ಮಗ ಪುನೀತ್ (25) ಮೃತ ಯುವಕ.
ಹೊಸೂರು ಗ್ರಾಮದ ಹೇಮಂತ್ ಹಾಗೂ ಪತ್ನಿ ಯಶೋಧ ಪ್ರತ್ಯೇಕವಾಗಿ ವಾಸವಾಗಿದ್ದಾರೆ.
ಹೊಸೂರು ಗ್ರಾಮದಲ್ಲಿ ತಂದೆ ಹೇಮಂತ್ ಜತೆ ಎರಡನೇ ಮಗ ಪ್ರಶಾಂತ್ (22) ಇದ್ದರೆ, ತಾಯಿ ಯಶೋಧ ಜತೆ ಬೇಡಿಗನಹಳ್ಳಿ ಗ್ರಾಮದಲ್ಲಿ ಪುನೀತ್ ವಾಸವಾಗಿದ್ದನು.
ಗುರುವಾರ ರಾತ್ರಿ 7.30 ರಿಂದ 8 ಗಂಟೆ ಸುಮಾರಿನಲ್ಲಿ ಹೊಸೂರು ಗ್ರಾಮದ ದೊಡ್ಡಪ್ಪನ ಮನೆಯಲ್ಲಿ ಊಟ ಮುಗಿಸಿಕೊಂಡು ಬೇಡಿಗನಹಳ್ಳಿಗೆ ಕೆರೆ ಏರಿ ಮೇಲೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಪುನೀತನ ಎಡಗೈ ಹಾಗೂ ಎದೆಯ ಭಾಗಕ್ಕೆ ಎರಡು ಗುಂಡು ಬಿದ್ದಿದೆ.
ಸ್ಥಳಕ್ಕೆ ಎಸ್ಪಿ ಆರ್.ಶ್ರೀನಿವಾಸ್ ಗೌಡ, ಹೊಳೆನರಸೀಪುರ ಡಿವೈಎಸ್ಪಿ ಲಕ್ಷ್ಮೇಗೌಡ, ಸಿಪಿಐ ಕುಮಾರ್ ಹಾಗೂ ಪಿಎಸ್ಐ ವಿನೋದ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೃತದೇಹವನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.