ಹಾಸನ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಂಡಿ ಮುಚ್ಚುವ ಕೆಲಸವನ್ನು ವಾರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ್ದರೂ
ಯಾವುದೇ ಪ್ರಗತಿಯಾಗಿಲ್ಲ. ರಸ್ತೆ ಅಪಘಾತ ಏನಾದರೂ ಸಂಭವಿಸಿದರೆ ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ ಎಂದು ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.
ಮಾರನಹಳ್ಳಿಯಿಂದ ಹಾಸನ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಗುಂಡಿ ಮುಚ್ಚುವ ಕಾರ್ಯ ಪ್ರಾರಂಭವಾಗಿ ಸಾಕಷ್ಟು
ದಿನಗಳೇ ಕಳೆದರೂ ಕೆಲಸ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬಕ್ಕೆ ಏನು ಕಾರಣ ಎಂಬುದು ಗೊತ್ತಿಲ್ಲ. ಡಿ.6ಕ್ಕೆ
ಸಕಲೇಶಪುರದಲ್ಲಿ ಅಧಿಕಾರಿಗಳ ಸಭೆ ಏರ್ಪಡಿಸಿದ್ದು, ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಾಡಾನೆ ಹಾವಳಿ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಲಾಗುವುದು. ಹಾಸನ ತಾಲ್ಲೂಕಿನ ದೊಡ್ಡಗದ್ದವಳ್ಳಿ ಮಹಾಲಕ್ಷ್ಮಿ ದೇವಾಲಯದ ಮಹಾಕಾಳಿ ವಿಗ್ರಹ ಭಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ನಿಧಿ ಆಸೆಗಾಗಿ ದುಷ್ಕರ್ಮಿಗಳು ವಿಗ್ರಹ ನಾಶಗೊಳಿಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಶನಿವಾರ ಅಲ್ಲಿಗೆ ಭೇಟಿ ನೀಡುತ್ತಿದ್ದು, ತನಿಖೆ ಬಳಿಕ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದರು.
ಚನ್ನರಾಯಪಟ್ಟಣ ಪಿಎಸ್ಐ ಕಿರಣ್ಕುಮಾರ್ ಆತ್ಮಹತ್ಯೆ ಪ್ರಕರಣ ತನಿಖೆ ಪೂರ್ಣಗೊಂಡಿದ್ದು, ಇಲಾಖೆಯ ಹಿರಿಯ
ಅಧಿಕಾರಿಗಳಿಂದಲೇ ಮಾಹಿತಿ ಕೊಡಿಸುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.