ADVERTISEMENT

ದೇಶದಲ್ಲಿ 6.30 ಕೋಟಿ ಮಂದಿಗೆ ಶ್ರವಣದೋಷ: ಡಾ. ರಾಘವೇಂದ್ರ ಪ್ರಸಾದ್ 

ಸೂಕ್ತ ಚಿಕಿತ್ಸೆ ಪಡೆಯಲು ಜಾಗೃತಿ ಮೂಡಿಸುವಂತೆ ಕರೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 13:33 IST
Last Updated 3 ಮಾರ್ಚ್ 2021, 13:33 IST
ಹಾಸನದಲ್ಲಿ ಏರ್ಪಡಿಸಿದ್ದ ವಿಶ್ವ ಶ್ರವಣ ದಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಉದ್ಘಾಟಿಸಿದರು.
ಹಾಸನದಲ್ಲಿ ಏರ್ಪಡಿಸಿದ್ದ ವಿಶ್ವ ಶ್ರವಣ ದಿನ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಉದ್ಘಾಟಿಸಿದರು.   

ಹಾಸನ: ಕಿವಿದೋಷವುಳ್ಳವರು ಹೊರ ಜಗತ್ತಿನ ನಡುವೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. 2020 ರ ಸಮೀಕ್ಷೆ ಪ್ರಕಾರ ಪ್ರಪಂಚದಲ್ಲಿ 46 ಕೋಟಿ ಜನರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ ಎಂದು ಹಿಮ್ಸ್‌ಕಿವಿ, ಗಂಟಲು ವಿಭಾಗದ ಮುಖ್ಯಸ್ಥ ಡಾ. ರಾಘವೇಂದ್ರ ಪ್ರಸಾದ್ ಹೇಳಿದರು.

ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಹಯೋಗದೊಂದಿಗೆ ಬುಧವಾರ ಏರ್ಪಡಿಸಿದ್ದ ವಿಶ್ವ ಶ್ರವಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

2019ರ ಪ್ರಕಾರ ದೇಶದಲ್ಲಿ 6.30 ಕೋಟಿ ಜನರು ಬಳಲುತ್ತಿದ್ದಾರೆ. ಇವರಲ್ಲಿ 3.40 ಕೋಟಿ 10
ವರ್ಷದೊಳಗಿನ ಮಕ್ಕಳು. 2050ರ ವೇಳೆಗೆ ಶ್ರವಣದಿಂದ ಬಳಲುವವರ ಸಂಖ್ಯೆ 90 ಕೋಟಿ
ತಲುಪಬಹುದು ಎಂದು ಅಂದಾಜಿಸಲಾಗಿದೆ ಎಂದು ವಿವರಿಸಿದರು.

ADVERTISEMENT

ಜಿಲ್ಲೆಯಲ್ಲಿ ಪ್ರಸ್ತುತ 22 ಮಂದಿ ಕಿವಿ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದು, 110 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಪ್ರತಿ ವರ್ಷ ನಾಲ್ಕರಿಂದ ಐದು ಮಕ್ಕಳಲ್ಲಿ ಶ್ರವಣದೋಷ ಕಂಡು ಬರುತ್ತಿದೆ. ಕಾಕ್ಲಿಯರ್ ಇಪ್ಲಾಂಟ್ ವ್ಯವಸ್ಥೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಮೊದಲ ಕಾಲೇಜು ಎಂಬ ಹೆಗ್ಗಳಿಕೆಗೆ ಹಿಮ್ಸ್‌ ಪಾತ್ರವಾಗುತ್ತದೆ ಎಂದರು.

ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್‌.ಗಿರೀಶ್, ಪಂಚೇಂದ್ರಿಯಗಳಲ್ಲಿ ಕಿವಿ ಅತ್ಯಂತ ಪ್ರಮುಖವಾಗಿದ್ದು, ಶ್ರವಣ ದೋಷದಿಂದ ಬಳಲುತ್ತಿರುವವರು ಸೂಕ್ತ ಚಿಕತ್ಸೆ ಪಡೆಯುವಂತೆ ಜಾಗೃತಿ ಮೂಡಿಸಬೇಕು.2016 ರಿಂದ ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ. ಶ್ರವಣ ದೋಷದ ಅರಿವು ಹಾಗೂ ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಹಾಸನ ವೈದ್ಯಕೀಯ ಸಂಸ್ಥೆಯ ಪ್ರಾಂಶುಪಾಲ ಕೆ.ಆರ್. ಡಾ. ನಾಗೇಶ್ ಮಾತನಾಡಿ, ಶ್ರವಣ ದೋಷದಿಂದ ಬಳಲುತ್ತಿರುವವರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಮುಂದೆ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಶ್ರವಣ ದೋಷದಿಂದ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್,ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ, ಆರ್.ಸಿ.ಎಚ್ ಅಧಿಕಾರಿ ಡಾ. ಕಾಂತರಾಜು, ಡಾ. ಈಶ್ವರಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.