ಸಕಲೇಶಪುರ: ಪಟ್ಟಣದ ಸಮೀಪದ ಕೊಲ್ಲಹಳ್ಳಿ ಗ್ರಾಮದಲ್ಲಿ, ಕಾಡಾನೆ ತುಳಿತದಿಂದ ಅರ್ಚಕರೊಬ್ಬರುಮಂಗಳವಾರ ಮೃತಪಟ್ಟಿದ್ದಾರೆ.
ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕ ಆಸ್ತಿಕ ಭಟ್ (52) ಮೃತಪಟ್ಟವರು. ಬೆಳಿಗ್ಗೆ ಐದೂವರೆಗೆ ಮನೆಯಿಂದ ಹೊರಬಂದಾಗ, ಅಂಗಳದಲ್ಲಿ ಇದ್ದ ಆನೆಯು ಅವರನ್ನು ಸೊಂಡಿಲಿನಿಂದ ಎತ್ತಿ ಹಾಕಿ, ತುಳಿದಿದೆ. ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.
ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.
ಶಾಸಕ ಎಚ್.ಕೆ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಗಿರೀಶ್, ಜಿಲ್ಲಾ ಪಂಚಾಯಿತಿ ಸಿಇಒ ಪರಮೇಶ್, ಉಪವಿಭಾಗಾಧಿಕಾರಿ ಎಂ. ಗಿರೀಶ್ ನಂದನ್, ತಹಶೀಲ್ದಾರ್ ಮಂಜುನಾಥ್ ಭೇಟಿ ನೀಡಿ ಮೃತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ₹ 2 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಉಳಿದ ₹ 5.5 ಲಕ್ಷ ಪರಿಹಾರದ ಹಣ ನೀಡುವುದಾಗಿ ಶಾಸಕರು ಹೇಳಿದರು.
ಕಳೆದ ಒಂದು ತಿಂಗಳಿಂದ ಇದೇ ಗ್ರಾಮದ ಸುತ್ತಮುತ್ತ ಸುಮಾರು 40 ಕಾಡಾನೆಗಳು ಓಡಾಡುತ್ತಿದ್ದು, ಆಸ್ತಿಪಾಸ್ತಿಗೆ ಹಾನಿ ಮಾಡುತ್ತಿದ್ದವು. ಇದೀಗ ಜೀವಹಾನಿಯೂ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.