ಹಾಸನ: ಎರಡು, ಮೂರು ತಿಂಗಳಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಪ್ರವಾಸ ಮಾಡುತ್ತೇನೆ ಎಂದು ರಾಜ್ಯಸಭಾ
ಸದಸ್ಯ ಎಚ್.ಡಿ.ದೇವೇಗೌಡ ಹೇಳಿದರು.
ರಾಜ್ಯ ಮಟ್ಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಪಕ್ಷ ಸಂಘಟನೆಗಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದು, ಹಲವು
ಘಟಕಗಳ ಪುನರ್ರಚನೆ ಮಾಡಿದ್ದಾರೆ. ಜಿಲ್ಲೆಯಿಂದ ನನ್ನ ರಾಜಕಾರಣ ಶುರುವಾಗಿ 60 ವರ್ಷವಾಗಿದೆ.ನೀರಾವರಿಗಾಗಿ ಹೋರಾಟ ಮಾಡುವುದು ಕೊನೆಯ ಘಟ್ಟದ ಕೆಲಸ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ
ಹೋರಾಟ ಮಾಡಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿ ಗುರುತಿಸಿ ಟಿಕೆಟ್
ನೀಡಲಾಗುವುದು. ಮಾರ್ಚ್ ಅಂತ್ಯಕ್ಕೆ ಮಹಿಳಾ ಮತ್ತು ಹಿಂದುಳಿದ ವರ್ಗಗಳ ಸಮಾವೇಶ ನಡೆಸಲಾಗುವುದು.
ವಿಜಯಪುರ, ಯಾದಗಿರಿಯಲ್ಲೂ ಸಮಾವೇಶ ನಡೆಸಲಾಗುವುದು. ಮಂಗಳೂರಿನಲ್ಲಿ ಗ್ರಾಮ ಪಂಚಾಯಿತಿ
ಗೆದ್ದಿದ್ದೇವೆ.ಹೈದರಾಬಾದ್ ಕರ್ನಾಟಕದಲ್ಲಿ ಶಕ್ತಿ ಇದ್ದು, ಅದನ್ನು ಹೆಚ್ಚಿಸಿಕೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿಏರ್ ಪೋರ್ಟ್, ಚನ್ನಪಟ್ಟಣ ಕೆರೆ ಅಭಿವೃದ್ಧಿಗೆ ಬಜೆಟ್ ನಲ್ಲಿ ಹಣ ಬಿಡುಗಡೆ ನೀಡುವುದಾಗಿ
ಅಧಿಕಾರಿಗಳು ವಿಷಯ ತಿಳಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ
ನೀಡಲಿದ್ದಾರೆ. ಅರಸೀಕೆರೆಯಲ್ಲಿ ಅರಣ್ಯ ಪ್ರದೇಶ ಹೆಚ್ಚು ಇದೆ. ಕಾಡು ಪ್ರಾಣಿಗಳ ಹಾವಳಿ ತಡೆಗೆ ಸರ್ಕಾರ
ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ವಶಕ್ಕೆ ಪಡೆದು, ಅವರ ವಿರುದ್ಧ
ಹಲವು ಸೆಕ್ಷನ್ಗಳನ್ನು ಹಾಕಿ ಜೈಲಿಗೆ ಕಳುಹಿಸಲಾಗಿದೆ. ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ
ಕಂಡುಕೊಳ್ಳಬೇಕು. ಸಭೆಗೆ ಆಹ್ವಾನಿಸಿದರೆ ಸಲಹೆ ನೀಡುವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಗೋಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.