ಹಾಸನ: ಉತ್ತಮ ಆಡಳಿತ ನೀಡುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರನ್ನು ಕೇವಲ ವಯಸ್ಸಿನ ಕಾರಣ ನೀಡಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದೆ, ಅವಧಿ ಪೂರ್ಣಗೊಳಿಸಲು ಹೈಕಮಾಂಡ್ಅವಕಾಶ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಗೌರವಾಧ್ಯಕ್ಷರೂ ಆಗಿರುವ ಅರಕಲಗೂಡು ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ ಆಗ್ರಹಿಸಿದರು.
ನುಗ್ಗೇಹಳ್ಳಿ ಪುರವರ್ಗ ಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ, ಹೊಳೆನರಸೀಪುರ ರಾಜಾಪುರ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ, ಮಹಾಸಭಾದತಾಲ್ಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಜತೆ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ದಕ್ಷಿಣ ಭಾರತದಲ್ಲಿ ಬಿಜೆಪಿ
ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಮೊದಲ ಮತ್ತು ಎರಡನೇ ಅಲೆ ನಿರ್ವಹಣೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ವಯಸ್ಸು ಬಿಟ್ಟರೆ, ಕೆಳಗಿಳಿಸಲು ಬೇರೆಕಾರಣಗಳೇ ಇಲ್ಲ. ಎರಡು ವರ್ಷಕ್ಕೆ ಅಧಿಕಾರ ಕಿತ್ತುಕೊಳ್ಳುವುದಾದರೆ ಸಿ.ಎಂ ಸ್ಥಾನ ಏಕೆನೀಡಬೇಕಿತ್ತು ಎಂದು ಪ್ರಶ್ನಿಸಿದರು.
ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ಬಂದಾಗ ಯಡಿಯೂರಪ್ಪ ಅವರೇ ಪೂರ್ಣಾವಧಿಗೆ ಸಿ.ಎಂ ಆಗಿ ಮುಂದುವರೆಯುತ್ತಾರೆ ಎಂದು ಹೈಕಮಾಂಡ್ ಹೇಳಿತ್ತು. ಆದರೆ, ಈಗ ಅದರಂತೆ ನಡೆದುಕೊಳ್ಳುತ್ತಿಲ್ಲ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಚುನಾವಣೆ ಸಂದರ್ಭದಲ್ಲಿ 76 ವರ್ಷದ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳಲಾಯಿತು. ಅವಧಿ ಪೂರೈಸಲು ಎರಡು ವರ್ಷ ಬಾಕಿ ಇರುವಾಗಲೇ ಸಿ.ಎಂ ಸ್ಥಾನದಿಂದ ಕೆಳಗಿಳಿಸುವ ಹೈಕಮಾಂಡ್ ಮುಂದಾಗಿರುವುದು ಎಷ್ಟು ಸರಿ? ಅಂದೇ ಅವರಿಗೆ ವಯಸ್ಸಿನ ಕಾರಣ ನೀಡಿ ಬೇರೆಯವರಿಗೆ ಅಧಿಕಾರ ನೀಡಬಹುದಿತ್ತು ಎಂದು ಅಭಿಪ್ರಾಯಪಟ್ಟರು.
ಶುಕ್ರವಾರ ಅಥವಾ ಶನಿವಾರ ರಾಜ್ಯದ 500ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಗಳೂರಿನಲ್ಲಿ ಒಂದೆಡೆ ಸಭೆ ಸೇರಿ ನಿರ್ಣಯ ಕೈಗೊಂಡು ಹೈಕಮಾಂಡ್ಗೆ ಮನವಿ ಸಲ್ಲಿಸಲಾಗುವುದು.ಯಾವುದೇ ಕಾರಣಕ್ಕೂ ಸಿ.ಎಂ ಬದಲಾವಣೆ ಮಾಡದಂತೆ ಪ್ರಧಾನಿ ಅವರಲ್ಲಿ ಮನವಿಮಾಡಲಾಗುವುದು ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.