ಹಾಸನ: ‘ನಗರದ ಬಿ.ಎಂ.ರಸ್ತೆಯಲ್ಲಿ ಸುಸ್ಥಿತಿಯಲ್ಲಿರುವ ತಾಲ್ಲೂಕು ಕಚೇರಿಯನ್ನು ನೆಲಸಮ ಮಾಡಿ, ಅದೇ ಜಾಗದಲ್ಲಿಯೇ ಹೊಸ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಿರುವುದು ಸರಿಯಲ್ಲ’ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು.
‘ಶಾಸಕರ ಅಭಿಪ್ರಾಯ ಪಡೆಯದೆ ತಾಲ್ಲೂಕು ಕಚೇರಿಯ ಆಡಳಿತವನ್ನುವಿದ್ಯಾನಗರದ ಜಿಲ್ಲಾ ತರಬೇತಿ ಕೇಂದ್ರದ ಎದುರಿನಹಾಸ್ಟೆಲ್ಗೆ ಸ್ಥಳಾಂತರ ಮಾಡುತ್ತಿರುವುದುಸರಿಯಲ್ಲ. ಕಟ್ಟಡ ಕೆಡವಲು ಸರ್ಕಾರ ಅನುಮತಿ ನೀಡಿಲ್ಲ. ಆದರೂ ಸ್ಥಳೀಯ ಶಾಸಕರ ಮಾತು ಕೇಳಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
‘ಜಿಲ್ಲಾಧಿಕಾರಿ ಕಚೇರಿಯನ್ನು ಬಿಜೆಪಿ ಕಚೇರಿ ಮಾಡಬಾರದು. ಬಿಜೆಪಿಯೇ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದಿಲ್ಲ. ಜನರಿಗೆ ತೊಂದರೆಯಾದರೆ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.
‘ಕೂಡಲೇ ಖರೀದಿ ಕೇಂದ್ರ ತೆರೆದು ರಾಗಿ, ಭತ್ತ, ಮುಸುಕಿನ ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಬೇಕು. ರಾಜ್ಯದಲ್ಲಿ ಹೆಚ್ಚುವರಿಯಾಗಿ 1.14 ಲಕ್ಷ ಟನ್ ರಾಗಿ ಖರೀದಿಸಲು ಸರ್ಕಾರ ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ. ಜಿಲ್ಲೆಯಲ್ಲಿ 75 ಸಾವಿರ ಹೆಕ್ಟೇರ್ ರಾಗಿ ಬೆಳೆಯಲಾಗಿದೆ. ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು’ ಎಂದರು.
ಹೊಳೆನರಸೀಪುರ ಕ್ಷೇತ್ರದಲ್ಲಿ ದುದ್ದ, ಶಾಂತಿಗ್ರಾಮ, ಉದಯಪುರ, ಹೊಳೆನರಸೀಪುರದಲ್ಲಿ ಖರೀದಿ ಕೇಂದ್ರ ತೆರೆಯಬೇಕು. ಆಯಾ ಕ್ಷೇತ್ರದ ಶಾಸಕರ ಅಭಿಪ್ರಾಯ ಪಡೆದು ಕೇಂದ್ರ ತೆರೆದು, ರೈತರಿಗೆ ಜಾಗೃತಿ ಮೂಡಿಸಬೇಕು. ಮಧ್ಯವರ್ತಿಗಳು ರೈತರ ಪಹಣಿ ನೀಡಿ ರಾಗಿ ಖರೀದಿ ಮಾಡಿ ದಾಸ್ತಾನು ಮಾಡುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಸಬ್ಸಿಡಿಯಲ್ಲಿ ಬಿತ್ತನೆ ಬೀಜ, ಔಷಧ ವಿತರಿಸಲು ಕ್ರಮ ಕೈಗೊಳ್ಳಬೇಕು. ಮುಂದಿನ ತಿಂಗಳಿನಿಂದ ಆಲೂ ಬಿತ್ತನೆ ಆರಂಭವಾಗಲಿದ್ದು, ಶಾಸಕರ ಸಭೆ ಕರೆದು, ಕೈಗೊಂಡಿರುವ ಕ್ರಮದ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.