
ಹಾಸನ: ಕಲುಷಿತ ನೀರಿನಿಂದ ಕಂಗೆಟ್ಟಿದ್ದ ತಾಲ್ಲೂಕಿನ ಹರಿಹರಪುರ ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗಿದೆ.
ಗ್ರಾಮದಲ್ಲಿ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂಬ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ತಜ್ಞರ ತಂಡ, ನೀರಿನ ಮೂಲಗಳನ್ನು ಪರಿಶೀಲಿಸಿ, ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಪರಿಶೀಲನೆಯ ನಂತರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದೀಗ ಗ್ರಾಮಕ್ಕೆ ಸುರಕ್ಷಿತ ನೀರು ಪೂರೈಕೆಯಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ನೀರಿನ ಸಮಸ್ಯೆ ಅಸಮಾಧಾನ ವ್ಯಕ್ತಪಡಿಸಿದ್ದ ಗ್ರಾಮಸ್ಥರು, ನಮಗೆ ಯಾವುದೇ ಗ್ಯಾರಂಟಿಗಳು ಬೇಡ. ಜೀವನ ನಿರ್ವಹಣೆಗೆ ಕುಡಿಯುವ ನೀರು ಅವಶ್ಯಕ. ಅನ್ನವಿಲ್ಲದೇ ಬದುಕಬಹುದು, ಆದರೆ ಕುಡಿಯುವ ನೀರಿಲ್ಲದೆ ಬದುಕಲು ಸಾಧ್ಯವಿಲ್ಲ. ತಕ್ಷಣವೇ ಶಾಶ್ವತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದರು.
ಈ ಕುರಿತು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ‘ಶುದ್ಧ ನೀರಿನ ‘ಗ್ಯಾರಂಟಿ’ ಕೊಡಿ’ ಶೀರ್ಷಿಕೆಯಡಿ ಫೆ.18 ರಂದು ವಿಶೇಷ ವರದಿ ಪ್ರಕಟವಾಗಿತ್ತು.
ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು, ಗ್ರಾಮಕ್ಕೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.
ಸಮಸ್ಯೆಗೆ ತಕ್ಷಣ ಸ್ಪಂದಿಸಿ ನೀರಿನ ಸೌಲಭ್ಯ ಒದಗಿಸಿದ್ದಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲಿ ಶಾಶ್ವತ ನೀರಿನ ಯೋಜನೆ ಜಾರಿ ಆಗಬೇಕೆಂಬ ಆಶಯ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.