ADVERTISEMENT

ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ದೈಹಿಕ, ಮಾನಸಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿ: ನ್ಯಾ.ನಾರಾಯಣ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2021, 15:11 IST
Last Updated 5 ಮಾರ್ಚ್ 2021, 15:11 IST
ಹಾಸನದಲ್ಲಿ ನಡೆಯುತ್ತಿರುವ ಪೊಲೀಸ್‌ ಕ್ರೀಡಾಕೂಟದಲ್ಲಿ ನ್ಯಾಯಾಧೀಶ ನಾರಾಯಣ ಪ್ರಸಾದ್‌ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿದರು.
ಹಾಸನದಲ್ಲಿ ನಡೆಯುತ್ತಿರುವ ಪೊಲೀಸ್‌ ಕ್ರೀಡಾಕೂಟದಲ್ಲಿ ನ್ಯಾಯಾಧೀಶ ನಾರಾಯಣ ಪ್ರಸಾದ್‌ ಅವರು ಕ್ರೀಡಾ ಜ್ಯೋತಿ ಸ್ವೀಕರಿಸಿದರು.   

ಹಾಸನ: ಎರಡು ದಿನಗಳ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಎರಡನೇ ಹೆಚ್ಚುವರಿ ಜಿಲ್ಲಾ ಹಾಗೂ ಸೇಷನ್ಸ್‌ ನ್ಯಾಯಾಧೀಶ ನಾರಾಯಣ ಪ್ರಸಾದ್‌ ಅವರು ಪಾರಿವಾಳ ಹಾರಿ ಬಿಡುವುದರ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು.

100 ಮೀ, 200 ಮೀ, 400 ಮೀಟರ್‌ ಓಟ , ಗುಂಡು ಎಸೆತ, ಶಟಲ್‌ ಬ್ಯಾಡ್ಮಿಂಟನ್‌, ವಾಲಿಬಾಲ್‌, ಜಾವಲಿನ ಎಸೆತ, ಹಗ್ಗಜಗ್ಗಾಟ ಸ್ಪರ್ಧೆಗಳಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿದ್ದರು. ಚಪ್ಪಾಳೆ ಮೂಲಕ ಸಹದ್ಯೋಗಿಗಳನ್ನು ಹುರಿದುಂಬಿಸಿದರು.

ADVERTISEMENT

ಇದಕ್ಕೂ ಮುನ್ನ ಮಾತನಾಡಿದ ನ್ಯಾ.ನಾರಾಯಣ , ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು ಹಾಗೂ ವೃತ್ತಿಯಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಕ್ರೀಡೆ ಹೆಚ್ಚು ಸಹಕಾರಿಯಾಗಲಿದೆ.ಪೊಲೀಸರ ಆರೋಗ್ಯ ಪೊಲೀಸರಿಗಿಂತ ಹೆಚ್ಚಾಗಿ ಸಮಾಜಕ್ಕೆ ಬಹುಮುಖ್ಯವಾದದ್ದು, ಪೊಲೀಸರು ಕೆಲ ಸಮಯವಾದರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ್ದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಲ್ಲಿ ಚೇತರಿಕೆ ಹಾಗೂ ಚೈತನ್ಯ ತುಂಬಲಿದೆ ಎಂದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಕಂದಾಯ ಇಲಾಖೆಯೊಂದಿಗೆ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯವಾದುದು. ಕೆಲಸದಒತ್ತಡವನ್ನು ಮರೆತು ಕ್ರೀಡೆಯ ಕಡೆಯೂ ಹೆಚ್ಚಿನ ಗಮನಹರಿಸಬೇಕು ಎಂದು ತಿಳಿಸಿದರು.

ಪೊಲೀಸ್ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸ್‌ಗೌಡ ಮಾತನಾಡಿ, ಕ್ರೀಡೆ ಮನಸ್ಸಿಗೆ ಆತ್ಮ ಸ್ಥೈರ್ಯ ನೀಡುವ ಜೊತೆಗೆ ಆರೋಗ್ಯವನ್ನು ಸದೃಢವಾಗಿಡಲು ಸಹಕರಿಸುತ್ತದೆ. ಕರ್ತವ್ಯ ನಿರ್ವಹಿಸುವ ವೇಳೆ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಎಚ್ಚರವಹಿಸುವುದಿಲ್ಲ ಕೆಲಸದ ಜೊತೆ ಜೊತೆಗೆ ಆರೋಗ್ಯ ರಕ್ಷಣೆ ಮುಖ್ಯ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಮಾತನಾಡಿ, ಹಬ್ಬಗಳು ಹಾಗೂ ಕುಟುಂಬದ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ.ಉತ್ತಮ ಜೀವನಕ್ಕೆ ಕ್ರೀಡೆಯನ್ನು ಒಂದು ಭಾಗವಾಗಿ ಅಳವಡಿಸಿಕೊಳ್ಳುವುದರಿಂದಆರೋಗ್ಯವಂತರಾಗಿ ಇರಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟೀಯ ಬ್ಯಾಸ್ಕೆಟ್ ಬಾಲ್‌ ಆಟಗಾರ್ತಿ ಮೇಕಲಾಗೌಡ ಅವರನ್ನು ಸನ್ಮಾನಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಇದ್ದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.