ಹಾಸನ: ಡ್ರಗ್ ಮಾಫಿಯದಲ್ಲಿ ಎಷ್ಟೇ ಪ್ರಭಾವಿಗಳು ಭಾಗಿಯಾಗಿದ್ದರೂ ಒತ್ತಡಕ್ಕೆ ಮಣಿಯದೆ ಆರೋಪಿಗಳ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಸಂಬಂಧ ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದ ಪರಿಷತ್ ಪದಾಧಿಕಾರಿಗಳು ‘ಈ ಮಾಫಿಯಾಕ್ಕೆ ರಾಜಕಾರಣಿಗಳು, ಶ್ರೀಮಂತ ಕುಟುಂಬಗಳ ವ್ಯಕ್ತಿಗಳು, ಸಿನಿಮಾ ನಟರಲ್ಲಿ ತಳಕು ಹಾಕಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಸಮಾಜಕ್ಕೆ ಮಾದರಿ ಆಗಬೇಕಾದವರು ದುಶ್ಚಟಗಳಿಗೆ ಅಂಟಿಕೊಂಡಿರುವುದು ನಿಜಕ್ಕೂ ಬೇಸರದ ಸಂಗತಿ. ದೇಶದ ಯುವ ಪೀಳಿಗೆಯನ್ನು ರಕ್ಷಿಸಿಕೊಳ್ಳಲು ಈ ಡ್ರಗ್ ಮಾಫಿಯಾವನ್ನು ಬುಡ ಸಮೇತ ಕಿತ್ತುಹಾಕಬೇಕು’ ಎಂದು ಒತ್ತಾಯಿಸಿದರು.
ರಾಜ್ಯದ ಹಲವು ಶಾಲಾ, ಕಾಲೇಜುಗಳಲ್ಲಿ ಡ್ರಗ್ ಜಾಲ ವ್ಯವಸ್ಥಿತವಾಗಿ ಕೋಡ್ ವರ್ಡ್ಗಳ ಮೂಲಕ ನಡೆಯುತ್ತಿದೆ. ಕಾಲೇಜು ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಸೇವನೆ ಒಂದು ರೀತಿಯ ಫ್ಯಾಷನ್ ಆಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಎಚ್ಚರಿಕೆ ವಹಿಸಬೇಕಾಗಿದೆ ಎಂದರು.
ಬೆಂಗಳೂರಿನ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ಪ್ರಭಾವಿಗಳ ಹಸ್ತಕ್ಷೇಪಕ್ಕೆ ಮಣಿಯದೆ ಕರ್ತವ್ಯ ನಿರ್ವಹಿಸುವಂತೆ ಪೋಲಿಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಬೇಕು ಎಂದು ಮನವಿ ಮಾಡಿದರು.
ನಿಯೋಗದಲ್ಲಿ ಎಬಿವಿಪಿ ತಾಲ್ಲೂಕು ಘಟಕದ ಪ್ರಮೋದ್, ಐಶ್ವರ್ಯ, ರಾಹುಲ್, ಓಂಕಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.