
ಸಕಲೇಶಪುರ: ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಿಲಂಕಾ ಮಾದರಿಯ ಆನೆಧಾಮ ನಿರ್ಮಿಸಲು ರೈತರು, ಅಧಿಕಾರಿಗಳು, ತಜ್ಞರೊಂದಿಗೆ ಫೆ.2 ರಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಲ್ಲಿ ಸಭೆ ನಡೆಸುವರು ಎಂದು ಮಾಜಿ ಶಾಸಕ ಎಚ್.ಎಂ. ವಿಶ್ವನಾಥ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣಗೊಂಡು ಒಂದು ವರ್ಷ ಕಳೆಯುತ್ತದೆ. ಅದರ ಅಂಗವಾಗಿ ಅದೇ ದಿನ ತಾಲ್ಲೂಕು ಒಕ್ಕಲಿಗರ ಸಂಘದಿಂದ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭಕ್ಕೆ ಆಹ್ವಾನಿಸಲು ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು ಮತ್ತು ಒಕ್ಕಲಿಗರ ಸಂಘದ ನಿರ್ದೇಶಕರು ಶನಿವಾರ ಉಪ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಆಹ್ವಾನಿಸಿದ್ದರು. ಫೆ. 2ಕ್ಕೆ ಬರಲು ಒಪ್ಪಿಗೆ ಸೂಚಿದ್ದಾರೆ ಎಂದರು.
‘ಕಾಡಾನೆಗಳ ನಿರಂತರ ದಾಳಿಯ ಗಂಭೀರ ಸಮಸ್ಯೆ ತಿಳಿದಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲೇ ಬೇಕು. ಸಲಹೆ ಹಾಗೂ ಸಮಸ್ಯೆಯ ಗಂಭೀರತೆಯ ಬಗ್ಗೆ ಅದೇ ದಿನ ಸಭೆ ನಡೆಸಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಸರ್ಕಾರದಿಂದ ಒಂದು ಮಹತ್ವದ ತೀರ್ಮಾನಕ್ಕೆ ಬರಲಾಗುವುದು’ ಎಂಬ ಭರವಸೆ ನೀಡಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಡಾನೆ ಸಮಸ್ಯೆ ಸಂಬಂಧ ಜ.5ರಂದು ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ ಎಂದು ವಿಶ್ವನಾಥ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.