ಹಾಸನ : ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಿಲ್ಲ. ಸಾವು, ನೋವು ಸಂಭವಿಸುತ್ತಲೇ ಇದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಆನೆ ಕಾರಿಡಾರ್ ನಿರ್ಮಿಸಿ ಆನೆಗಳನ್ನು ಸಾಮೂಹಿಕವಾಗಿ ಸ್ಥಳಾಂತರ ಮಾಡಬೇಕು. ಅಲ್ಲಿಯವರೆಗೂ ತಾತ್ಕಾಲಿಕ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜಿಲ್ಲೆಗೆ ಯಾವುದೇ ಹೊಸ ಯೋಜನೆ ಮಂಜೂರು ಮಾಡುವಂತೆ ಕೇಳುತ್ತಿಲ್ಲ. ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಅನುದಾನ ನೀಡಿದರೆ ಸಾಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕೋವಿಡ್ನಿಂದಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ತಿಂಗಳಿಗೆ ₹10 ಸಾವಿರ ಪರಿಹಾರ ನೀಡಬೇಕು. ಕಾರ್ಮಿಕರಿಗೆ ಸರ್ಕಾರ ಘೋಷಿಸಿರುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಜೀವನ ನಡೆಸುವುದೇ ಕಷ್ಟವಾಗಿದೆ. ಕೋವಿಡ್ನಿಂದ ಮೃತಪಟ್ಟಿರುವ ಬಿಪಿಎಲ್ ಕುಟುಂಬದವರಿಗೆ ಸರ್ಕಾರ ಎನ್ಡಿಆರ್ಎಫ್ ನಿಂದ ಪರಿಹಾರ ನೀಡಬೇಕು. ಚಿಕಿತ್ಸೆಗೆ ಖರ್ಚು ಮಾಡಿರುವ ಹಣದಲ್ಲಿ ಶೇಕಡಾ 50ರಷ್ಟು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಬೇಕು ಎಂದು ಒತ್ತಾಯಿಸಿದರು.
ಸರ್ಕಾರ ಮತ್ತು ಜಿಲ್ಲಾಡಳಿತದ ದ್ವಂದ್ವ ನೀತಿಯಿಂದ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ಮುಂದುವರೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ಸರ್ಕಾರ ಚುನಾವಣೆಗೆ ಆದ್ಯತೆ ನೀಡಿದ ಕಾರಣ ಕೋವಿಡ್ ಎರಡನೇ ಅಲೆಯಲ್ಲಿ ಸಾವು, ನೋವು ಹೆಚ್ಚು ಸಂಭವಿಸಿದೆ. ಮರಣ ಸಂಖ್ಯೆ ನಿಖರವಾಗಿ ನೀಡುತ್ತಿಲ್ಲ. ಉದಾಹರಣೆಗೆ ಜಿಲ್ಲೆಯಲ್ಲಿ ಬುಧವಾರ 11 ಜನರು ಮೃತಪಟ್ಟಿದರೆ, ಜಿಲ್ಲಾಡಳಿತ 8 ಮಂದಿ ಸಾವು ಪ್ರಕಟಿಸಿದೆ. ಸಕಲೇಶಪುರ ಪಿಡಿಒ ಮೃತಪಟ್ಟರೂ ಪರಿಹಾರ ನೀಡಿಲ್ಲ. ಶುಕ್ರವಾರ ಜಿಲ್ಲೆಗೆ ಭೇಟಿ ನೀಡುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಮಸ್ಯೆಗಳನ್ನು ಗಮನಕ್ಕೆ ತರಲಾಗುವುದು ಎಂದು ವಿವರಿಸಿದರು.
ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಲು ನಿರ್ಧರಿಸಿರುವುದು ಸರಿಯಲ್ಲ. ಇಂಧನ ಸಚಿವನಾಗಿದ್ದಾಗ ಒಮ್ಮೆಯೂ ವಿದ್ಯುತ್ ದರ ಏರಿಕೆ ಮಾಡಿರಲಿಲ್ಲ ಎಂದರು.
ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಹೆಚ್ಚು ಅನುದಾನ ನೀಡಿ, ಹಾಸನ ಕಡೆಗಣಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಗೆಚಿಕಿತ್ಸೆ ಪಡೆದ ಬಡವರಿಗೆ ಸರ್ಕಾರವ ಆರ್ಥಿಕ ಸಹಾಯ ನೀಡಬೇಕು ಎಂದರು. ಶಾಸಕ ಸಿ.ಎನ್.ಲಿಂಗೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.