ADVERTISEMENT

ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ: ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಕೋವಿಡ್‌ನಿಂದ ತಂದೆ, ತಾಯಿ ಕಳೆದುಕೊಂಡ ಮಕ್ಕಳಿಗೆ ನೆರವು: ಡಿ.ಸಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 13:13 IST
Last Updated 8 ಜುಲೈ 2021, 13:13 IST
ಬಾಲ್ಯ ವಿವಾಹ ತಡೆ ಕುರಿತು ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಬಾಲ್ಯ ವಿವಾಹ ತಡೆ ಕುರಿತು ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.   

ಹಾಸನ: ಬಾಲ್ಯ ವಿವಾಹಗಳು ನಡೆಯದಂತೆ ಸಂಪೂರ್ಣ ಎಚ್ಚರಿಕೆ ವಹಿಸುವುದರ ಜತೆಗೆ ಪ್ರೋತ್ಸಾಹಿಸುವ ಪೋಷಕರು ಹಾಗೂ ಪ್ರೇರೇಪಿಸುವವರ ವಿರುದ್ಧವೂ ಕಡ್ಡಾಯವಾಗಿ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಗುರುವಾರ ಮಕ್ಕಳ ರಕ್ಷಣಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಹೆಚ್ಚಿನ ನಿಗಾವಹಿಸಿ, ಅವರನ್ನು ರಕ್ಷಿಸಬೇಕು. ಕೋವಿಡ್ ಕಾಯಿಲೆಯಿಂದ ತಂದೆ, ತಾಯಿ ಇಬ್ಬರೂ ಮೃತಪಟ್ಟ ಮಕ್ಕಳಿಗೆ ₹3,500 ಹಾಗೂ ತಂದೆ ಅಥವಾ ತಾಯಿ ಮೃತಪಟ್ಟ ಬಡ ಕುಟುಂಬದ ಮಕ್ಕಳನ್ನು ಗುರುತಿಸಿ ಒಂದು ಸಾವಿರ ರೂಪಾಯಿ ಸಹಾಯ ಧನ ನೀಡಬೇಕು ಎಂದು ಸೂಚಿಸಿದರು.

ಬಾಲಮಂದಿರಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸೋಂಕಿನ ಯಾವುದೇ ರೀತಿಯ ಲಕ್ಷಣಗಳು ಇಲ್ಲದಿದ್ದರೂ ಕಡ್ಡಾಯವಾಗಿ 15 ದಿನಕ್ಕೊಮ್ಮೆ ಕೋವಿಡ್ ಪರೀಕ್ಷೆ ಮಾಡುವಂತೆ ನಿರ್ದೇಶನ ನೀಡಿದರು.

ADVERTISEMENT

ವಿಶೇಷ ಪಾಲನಾ ಯೋಜನೆಯಡಿ ಎಚ್‌ಐವಿ ಸೋಂಕಿತ ಹಾಗೂ ಬಾಧಿತಕುಟುಂಬಗಳ ಮಕ್ಕಳಿಗೆ ಶಿಕ್ಷಣ, ಪೂರಕ ಪೌಷ್ಟಿಕ ಆಹಾರ ಮತ್ತಿತರ ವೆಚ್ಚಗಳಿಗೆಮಾಸಿಕ ₹1000 ಆರ್ಥಿಕ ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ
ನೀಡಬೇಕು ಎಂದು ಹೇಳಿದರು.

ಲೈಂಗಿಕ ದೌರ್ಜನ್ಯಕ್ಕೆ ಒಳಪಟ್ಟ ಮಕ್ಕಳ ಪ್ರಕರಣಗಳನ್ನು ಜಿಲ್ಲಾ ಸಮಗ್ರಮಕ್ಕಳ ರಕ್ಷಣಾ ಘಟಕದ ವತಿಯಿಂದ ಗುರುತಿಸಿ, ಮಕ್ಕಳ ಅಭಯ ನಿಧಿಯಿಂದಅಗತ್ಯವಿರುವವರಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ನೀಡಬೇಕು ಎಂದು ತಿಳಿಸಿದರು.

18 ವರ್ಷದೊಳಗಿರುವ ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸುವುದರಿಂದ ಹಲವಾರು ಪ್ರಕರಣ ಕಡಿಮೆ ಮಾಡಬಹುದು ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್ ನಂದಿನಿ,ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಪ್ರಭಾರಿ ಉಪನಿರ್ದೇಶಕ ದಿಲೀಪ್, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಉಷಾ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ಕೋಮಲತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.