ADVERTISEMENT

ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ- ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಶಿವಣ್ಣ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 15:29 IST
Last Updated 9 ನವೆಂಬರ್ 2021, 15:29 IST
ಹಾಸನದ ಹೇಮಾವತಿ ಪ್ರತಿಮೆ ಬಳಿ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ಚಾಲನೆ ನೀಡಿದರು. ನ್ಯಾಯಾಧೀಶ ಬಿ.ಕೆ ರವಿಕಾಂತ್, ಬಿ.ಎನ್‌ ನಂದಿನಿ, ಸಿ.ಕೆ.ಹರೀಶ್‌, ಬಿ.ಟಿ.ಮಾನವ ಇದ್ದರು
ಹಾಸನದ ಹೇಮಾವತಿ ಪ್ರತಿಮೆ ಬಳಿ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಶಿವಣ್ಣ ಚಾಲನೆ ನೀಡಿದರು. ನ್ಯಾಯಾಧೀಶ ಬಿ.ಕೆ ರವಿಕಾಂತ್, ಬಿ.ಎನ್‌ ನಂದಿನಿ, ಸಿ.ಕೆ.ಹರೀಶ್‌, ಬಿ.ಟಿ.ಮಾನವ ಇದ್ದರು   

ಹಾಸನ: ‘ಕಾನೂನು ಬಗ್ಗೆ ಪ್ರತಿಯೊಬ್ಬರು ಅರಿವು ಹೊಂದಿರಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಶಿವಣ್ಣ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಕಾನೂನು ಸೇವೆಗಳ ದಿನದ ಅಂಗವಾಗಿ ನಗರದ ಹೇಮಾವತಿ ಪ್ರತಿಮೆ ಬಳಿ ಮಂಗಳವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಮತ್ತು ಕಲಾ ತಂಡದ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾನೂನು ಸೇವೆಗಳ ದಿನ ಆಚರಿಸಲಾಗುತ್ತಿದೆ. ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಉದ್ದೇಶದಿಂದ ಬೀದಿ ನಾಟಕ ಹಾಗೂ ಸೈಕಲ್ ಜಾಥಾ ಏರ್ಪಡಿಸಲಾಗಿದೆ. ಒಂದು ತಿಂಗಳು ಜಿಲ್ಲೆಯ ಹಳ್ಳಿಗಳಿಗೆ ತೆರಳಿ ಕಾನೂನುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ. ರವಿಕಾಂತ್ ಮಾತನಾಡಿ, ‘ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು. ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸಿದರೆ, ಸಮಾಜದಲ್ಲಿ ಶಾಂತಿ, ನೆಮ್ಮದಿಯಿಂದ ಇರಲು ಸಾಧ್’ಯ ಎಂದು ಅಭಿಪ್ರಾಯಪಟ್ಟರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಮಾತನಾಡಿ, ‘ಬಡವ, ಶ್ರೀಮಂತ ಎಂಬ ಭೇದಭಾವವಿಲ್ಲದೆ ಕಾನೂನು ಎಲ್ಲರಿಗೂ ಸಮಾನವಾದ ನ್ಯಾಯ ನೀಡುತ್ತದೆ. ಸಾರ್ವಜನಿಕರಿಗೆ ತೊಂದರೆಯಾದಾಗ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯ ಪಡೆದು ಉಚಿತ ಕಾನೂನು ಸೇವೆ ಪಡೆಯಬಹುದಾಗಿದೆ’ ಎಂದು ಸಲಹೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಕೆ. ಹರೀಶ್, ಕಲಾವಿದ ಬಿ.ಟಿ ಮಾನವ ಮತ್ತು ಕಲಾ ತಂಡದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.