
ಹಾಸನ: ‘ದಲಿತರು , ಅಲ್ಪಸಂಖ್ಯಾತರಿಗೆ ದೊರೆಯುವ ಸಬ್ಸಿಡಿ ಯೋಜನೆಗಳ ಸೌಲಭ್ಯ ಕೊಡಿಸುವುದಾಗಿ ಲಕ್ಷಾಂತರ ರೂ ವಂಚಿಸಿರುವ ಸಿ.ಎಸ್ ನಾಗರಾಜ್ ನನ್ನು ಬಂಧಿಸಬೇಕು’ ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ದಲಿತ ಹಕ್ಕುಗಳ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಎಂ.ಜಿ ಪೃಥ್ವಿ ಮಾತನಾಡಿ , ‘ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ನಾಗರಾಜ್ ರೈತರನ್ನು ನಂಬಿಸಿ ₹60 ಲಕ್ಷಕ್ಕೂ ಹೆಚ್ಚು ವಂಚನೆ ಮಾಡಿದ್ದಾರೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಕ್ರಮವಾಗಿಲ್ಲ, ನಾಗರಾಜ್ ಅವರ ಪೋಷಕರು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು ರಾಜಕೀಯ ಪ್ರಭಾವ ಹೊಂದಿದ್ದಾರೆ. ಆದ್ದರಿಂದ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಆರ್ ನವೀನ್ ಕುಮಾರ್ ಮಾತನಾಡಿ, ನಾಗರಾಜ್ ವಿರುದ್ಧ ಪೊಲೀಸ್ ಠಾಣೆಗೆ ಹಲವು ದೂರುಗಳು ಬಂದಿದ್ದರೂ ಸರಿಯಾಗಿ ತನಿಖೆ ಮಾಡಿಲ್ಲ , ಬಂಧಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಅಧಿಕಾರಿಗಳು ಸಹ ಪ್ರಕರಣದಲ್ಲಿ ಶಾಮಿಲಾಗಿದ್ದು, ತನಿಖೆ ಮಾಡಿ ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು .
ದಲಿತ ಮುಖಂಡರಾದ ರಾಜಶೇಖರ್, ಸಿಐಟಿಯು ಮುಖಂಡ ಅರವಿಂದ್, ಕಾರ್ಯಕರ್ತರಾದ ಶೈಲಾ, ವೀಣಾ, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
‘ತಾಲ್ಲೂಕಿನ ರೈತರಿಗೆ ಸಹಾಯ ಧನದ ಮೂಲಕ ಕೃಷಿ ಸಲಕರಣೆ ಟ್ರ್ಯಾಕ್ಟರ್ ಕಾರು ಸೇರಿದಂತೆ ಆಮಿಷಗಳ ಮೂಲಕ ಲಕ್ಷಾಂತರ ಮೊತ್ತ ವಂಚಿಸಿರುವ ನಾಗರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಪ್ರಕರಣವನ್ನು ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ನ್ಯಾಯ ಒದಗಿಸಬೇಕು ಹೊಳೆನರಸಿಪುರದ ಪೊಲೀಸರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡುವ ಮೂಲಕ ನಾಗರಾಜ್ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಘಟಕದ ಅಧ್ಯಕ್ಷ ಎಚ್.ಆರ್ ನವೀನ್ ಕುಮಾರ್ ಅಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.