ಹಾಸನ: ತಾಲ್ಲೂಕಿನ ಸಾವಂತನಹಳ್ಳಿ ಗ್ರಾಮದಲ್ಲಿ ಒತ್ತುವರಿ ಮಾಡಿದ್ದ ಸುಮಾರು 82 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಶುಕ್ರವಾರ ಆರಂಭವಾಗಿದೆ.
ಗ್ರಾಮದ ಸರ್ವೆ ನಂ.99ರಲ್ಲಿ 122 ಎಕರೆ 20 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದ್ದು, ಶುಕ್ರವಾರ 82 ಎಕರೆ ಒತ್ತುವರಿ ತೆರವುಗೊಳಿಸಲಾಗಿದೆ. ಶನಿವಾರವೂ ಕಾರ್ಯಾಚರಣೆ ಮುಂದುವರಿಯಲಿದೆ.
ಕರ್ನಾಟಕ ಲೋಕಾಯುಕ್ತ ನ್ಯಾಯಾಲಯ 2017 ರ ಏಪ್ರಿಲ್ 5 ಒತ್ತುವರಿಯನ್ನು ತೆರವು ಮಾಡಿಸಲು ಆದೇಶ ನೀಡಿತ್ತು. ಅದರ ಅನ್ವಯ ಒತ್ತುವರಿದಾರರಿಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು. ಅದಾಗ್ಯೂ ಒತ್ತುವರಿ ತೆರವು ಮಾಡದೇ ಇರುವುದರಿಂದ ಕಾರ್ಯಾಚರಣೆ ಆರಂಭಿಸಲಾಗಿದೆ.
ಅರಣ್ಯ ಭೂಮಿಯಲ್ಲಿ ಮೆಕ್ಕೆಜೋಳ ಬೆಳೆದಿದ್ದ ಪ್ರದೇಶವನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಅದೇ ಜಾಗದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಯಿತು. ಈ ವೇಳೆ ಕೆಲವು ರೈತರು ಮೆಕ್ಕೆಜೋಳ ಕಟಾವು ಮಾಡಿಕೊಂಡು ತೆಗೆದುಕೊಂಡು ಹೋದರು.
ಸ್ಥಳದಲ್ಲಿ ಸಿಸಿಎಫ್ ಏಡುಕೊಂಡಲು, ಡಿಸಿಎಫ್ ಸೌರಭ್ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ವೆಂಕಟೇಶ್ ನಾಯ್ಡು, ತಮ್ಮಯ್ಯ ಆರ್ಎಫ್ಒ ಲಷ್ಕರ್ ನಾಯಕ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.