ಹಾಸನ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಶನಿವಾರ ಆಚರಿಸಲಾಯಿತು.
ಜಿಲ್ಲಾಡಳಿತ, ನಗರ ಸಭೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗ ದೊಂದಿಗೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಅವರ 153ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ 118ನೇ ವರ್ಷದ ಜನ್ಮ ದಿನಾಚರಣೆಕಾರ್ಯಕ್ರಮವನ್ನು ಶಾಸಕ ಪ್ರೀತಂ ಜೆ. ಗೌಡ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಪ್ರೀತಂ, ಮಹನೀಯರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಗಾಂಧೀಜಿ ಅವರು ಅಹಿಂಸೆಯ ಮೂಲಕ ಸ್ವಾತಂತ್ರ ತಂದು ಕೊಟ್ಟಮಹನೀಯ ವ್ಯಕ್ತಿ ಹಾಗೂ ಶಾಸ್ತ್ರೀ ಅವರು ಪ್ರಧಾನಿಯಾಗಿ ದೇಶವನ್ನು ಹೇಗೆ ಮುನ್ನಡೆಸಸಬೇಕುಎಂಬುದನ್ನು ತಿಳಿಸಿಕೊಟ್ಟಿದ್ದಾರೆ ಎಂದರು.
ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಗಾಂಧೀಜಿ ಪ್ರಪಂಚಕ್ಕೆ ಅಹಿಂಸಾ ತತ್ವ ಸಾರಿದವರು. ಅವರ ಆದರ್ಶ, ಅಹಿಂಸೆ, ಸತ್ಯ ಮಾರ್ಗಗಳೆಲ್ಲವೂ ಸರ್ವಕಾಲಿಕ ಸತ್ಯ. ಶಾಸ್ತ್ರೀ ಅವರ ಸರಳತೆ ಮೈಗೂಡಿಸಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ ಶಿವಣ್ಣ ಮಾತನಾಡಿ, ಗಾಂಧೀಜಿ ಅವರ ಆದರ್ಶ, ತತ್ವ ಜೀವನಕ್ಕೆ ಮುಖ್ಯ. ನೈತಿಕತೆ, ಪ್ರಾಮಾಣಿಕತೆಗೆ ಹೆಸರು ವಾಸಿಯಾದ ಲಾಲ್ ಬಹುದ್ದೂರ್ ಶಾಸ್ತ್ರೀ ಹಾಗೂ ಯಶೋದರ ದಾಸಪ್ಪ ಅವರನ್ನು ಸ್ಮರಿಸಿದರು.
ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಭಜನಾ ಕಾರ್ಯಕ್ರಮ ನಡೆಸಿಕೊಟ್ಟಿತು. ಇಂದಿರಾಗಾಂಧಿ ವೃದ್ಧಾಪ್ಯ ಪಿಂಚಣಿ ಪಡೆಯುತ್ತಿರುವ ಇಬ್ಬರು ಹಿರಿಯರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಚ್.ವಿ. ನಾಗರಾಜ್, ಡಿವೈಎಸ್ ಪಿ ಪುಟ್ಟಸ್ವಾಮಿ ಗೌಡ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್, ಜಿಲ್ಲಾ ಪಂಚಾಯಿತಿ ಡಿ.ಆರ್.ಡಿ.ಎ ಕೋಶದ ಯೋಜನಾ ನಿರ್ದೇಶಕ ವಿಠ್ಠಲ್ ಕಾವಳೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಪುನಿತ್ ಹಾಜರಿದ್ದರು. ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ನಿರೂಪಿಸಿದರು.
ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅಪರೂಪದ ಛಾಯಾಚಿತ್ರ ಫಲಕಗಳನ್ನು ಪ್ರದರ್ಶಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.