ADVERTISEMENT

‘ಶಾಲಾ -ಕಾಲೇಜುಗಳನ್ನು ಅನುದಾನ ಒಳಪಡಿಸಿ’

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 14:39 IST
Last Updated 3 ಡಿಸೆಂಬರ್ 2022, 14:39 IST

ಹಾಸನ: ರಾಜ್ಯದಲ್ಲಿ 1995 ರ ನಂತರ ಪ್ರಾರಂಭವಾದ ಶಾಲಾ– ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸುವಂತೆ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ರಾಜ್ಯ ಘಟಕದ ಉಪಾಧ್ಯಕ್ಷ ಮಂಜೇಗೌಡ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಸಹಭಾಗಿತ್ವದಲ್ಲಿ ಶಿಕ್ಷಣ ನೀಡುತ್ತ ಬಂದಿವೆ. ಸರ್ಕಾರದಿಂದ ಅನುದಾನ ಪಡೆಯುವ ಮೂಲಕ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.

1986ರಲ್ಲಿ ಸರ್ಕಾರದಿಂದ ಅನುದಾನವನ್ನು ನಿಲ್ಲಿಸಲಾಗಿತ್ತು. ನಂತರ ಬಸವರಾಜ ಹೊರಟ್ಟಿ ಅವರು 1993 ರವರೆಗೆ ಅನುದಾನವನ್ನು ನೀಡಿದರು. ಆದರೆ 2008ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, 1993 ರಿಂದ 1995 ರವರೆಗೆ ಅಸ್ತಿತ್ವಕ್ಕೆ ಬಂದ ಕನ್ನಡ ಮಾಧ್ಯಮ ಶಾಲಾ– ಕಾಲೇಜುಗಳಿಗೆ ಅನುದಾನವನ್ನು ನಿಲ್ಲಿಸಿದ್ದು, ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಯಾವುದೇ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ADVERTISEMENT

ರಾಜ್ಯದಲ್ಲಿ ಸುಮಾರು 400 ಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಪ್ರಾಥಮಿಕ ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಮಾಧ್ಯಮ ಶಾಲಾ– ಕಾಲೇಜುಗಳಲ್ಲಿ ಉತ್ತಮ ಶಿಕ್ಷಣ ನೀಡುತ್ತಿದ್ದರೂ ಸರ್ಕಾರಿ ಸೌಲಭ್ಯಗಳಿಲ್ಲದೆ ಕನ್ನಡ ಶಾಲೆಗಳನ್ನು ನಡೆಸುವುದು ಕಷ್ಟಕರವಾಗಿದೆ ಎಂದು ತಿಳಿಸಿದರು.

ಸರ್ಕಾರ ಮನವಿಗೆ ಸ್ಪಂದಿಸಿ 1995 ರ ನಂತರ ಪ್ರಾರಂಭವಾಗಿರುವ ಕನ್ನಡ ಶಾಲಾ-ಕಾಲೇಜುಗಳಿಗೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ವಿಜಯ ಕಾಳಪ್ಪ, ಕಿರಣ್ ಕುಮಾರ್, ಒಕ್ಕೂಟದ ಜಿಲ್ಲಾ ಘಟಕದ ಸಂಘಟನಾ ಕಾರ್ಯದರ್ಶಿ ಸಿ.ಪಿ. ಲೋಕೇಶ್, ಕರಿಯಯ್ಯ, ಗೀತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.